ಬೆಂಗಳೂರು: ಹೆಬ್ಬಾಳ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ವಾಹನವೊಂದು ಗುದ್ದಿದ್ದರಿಂದಾಗಿ ಜಾಯೇದಾ ಬೇಗ್ (40) ಎಂಬುವರು ಮೃತಪಟ್ಟಿದ್ದಾರೆ.
‘ಸ್ಥಳೀಯ ಅಪಾರ್ಟ್ಮೆಂಟ್ ಸಮುಚ್ಚಯವೊಂದರಲ್ಲಿ ಕೆಲಸ ಮಾಡುತ್ತಿದ್ದ ಜಾಯೇದಾ, ವಿದ್ಯಾರಣ್ಯಪುರದಿಂದ ಜಕ್ಕೂರಿನ ಕಡೆಗೆ ಹೊರಟಿದ್ದಾಗ ಈ ಅವಘಡ ಸಂಭವಿಸಿದೆ’ ಎಂದು ಹೆಬ್ಬಾಳ ಸಂಚಾರ ಪೊಲೀಸರು ಹೇಳಿದರು.
‘ಜಾಯೇದಾ ತಮ್ಮ ಪಾಡಿಗೆ ತಾವು ನಡೆದುಕೊಂಡು ರಸ್ತೆಯಲ್ಲಿ ಹೊರಟಿದ್ದರು. ಅದೇ ವೇಳೆ ವೇಗವಾಗಿ ಬಂದ ವಾಹನವೊಂದು ಅವರಿಗೆ ಡಿಕ್ಕಿ ಹೊಡೆದಿತ್ತು. ತಲೆಗೆ ತೀವ್ರ ಪೆಟ್ಟು ಬಿದ್ದಿತ್ತು. ತೀವ್ರ ರಕ್ತಸ್ರಾವದಿಂದ ಅವರು ಸ್ಥಳದಲ್ಲಿ ಕೊನೆಯುಸಿರೆಳೆದಿದ್ದಾರೆ’ ಎಂದರು.
‘ವಾಹನ ಯಾವುದು ಎಂಬುದು ಗೊತ್ತಾಗಿಲ್ಲ. ಪ್ರತ್ಯಕ್ಷದರ್ಶಿಗಳ ಹೇಳಿಕೆ ಸಂಗ್ರಹಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ತಿಳಿಸಿದರು.