ಬೆಂಗಳೂರು: ಬ್ಯಾಟರಾಯನಪುರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಅಪಘಾತವನ್ನುಂಟು ಮಾಡಿ ಪರಾರಿಯಾಗಿದ್ದ ಆರೋಪಿ ಆಂಥೋನಿ ರಾಜ್ (44) ಎಂಬಾತ, ಒಂಬತ್ತು ವರ್ಷಗಳ ನಂತರ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.
‘2012ರಲ್ಲಿ ಅಪಘಾತ ಸಂಭವಿಸಿತ್ತು. ನಿರ್ಲಕ್ಷ್ಯ ವಹಿಸಿದ್ದ ಆರೋಪದಡಿ ಆಂಥೋನಿ ರಾಜ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಜೊತೆಗೆ, ಆತನಿಗೆ 10 ತಿಂಗಳ ಜೈಲು ಶಿಕ್ಷೆಯೂ ಆಗಿತ್ತು’ ಎಂದು ಪೊಲೀಸ್ ಮೂಲಗಳು ಹೇಳಿವೆ.
‘ಪ್ರಕರಣದಲ್ಲಿ ಜಾಮೀನು ಪಡೆದಿದ್ದ ಆರೋಪಿ, ತಲೆಮರೆಸಿಕೊಂಡಿದ್ದ. ಶಿಕ್ಷೆಯನ್ನೂ ಅನುಭವಿಸಿರಲಿಲ್ಲ. ಆತನ ಬಗ್ಗೆ ಮಾಹಿತಿ ಕಲೆಹಾಕಿ, ಸೋಮವಾರ ಬಂಧಿಸಲಾಗಿದೆ. ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ’ ಎಂದೂ ತಿಳಿಸಿವೆ.