ಬೆಂಗಳೂರು: ಕೆ.ಜಿ. ಹಳ್ಳಿ ಮತ್ತು ಡಿ.ಜೆ. ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಮಾಜಿ ಮೇಯರ್ ಸಂಪತ್ ರಾಜ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನವೆಂಬರ್ 12ಕ್ಕೆ ಮುಂದೂಡಿದೆ.
ಗಲಭೆಯಲ್ಲಿ ಭಾಗಿಯಾದ ಆರೋಪದಡಿ ಡಿ.ಜೆ. ಹಳ್ಳಿ ಪೊಲೀಸ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಿಸಿರುವ ಪ್ರಥಮ ಮಾಹಿತಿ ವರದಿ (ಎಫ್ಐಆರ್) ರದ್ದು ಮಾಡುವಂತೆ ಸಂಪತ್ ರಾಜ್ ಅರ್ಜಿಯಲ್ಲಿ ಕೋರಿದ್ದಾರೆ. ಸ್ವತಃ ಪರಿಶಿಷ್ಟ ಜಾತಿಗೆ ಸೇರಿರುವ ಅರ್ಜಿದಾರರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗದು ಎಂದು ಸಂಪತ್ ರಾಜ್ ಪರ ವಕೀಲರು ವಾದಿಸಿದರು.
ಪ್ರಕರಣ ರದ್ಧತಿ ಕೋರಿಕೆಯನ್ನು ವಿರೋಧಿಸಿದ ಪ್ರಾಸಿಕ್ಯೂಷನ್ ಪರ ವಕೀಲರು, ‘ಅರ್ಜಿದಾರರು ಒಬ್ಬ ತಲೆಮರೆಸಿಕೊಂಡಿರುವ ಆರೋಪಿ. ಅವರ ವಿರುದ್ಧ ಗಂಭೀರವಾದ ಆರೋಪಗಳಡಿ ಪ್ರಕರಣ ದಾಖಲಿಸಲಾಗಿದೆ. ತಲೆಮರೆಸಿಕೊಂಡಿರುವ ವ್ಯಕ್ತಿ ಪ್ರಕರಣ ರದ್ಧತಿಗೆ ಮನವಿ ಮಾಡುವಂತಿಲ್ಲ’ ಎಂದರು.