ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧದ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿದ್ದ ಅರ್ಜಿಗಳ ಕುರಿತ ಅಂತಿಮ ವಿಚಾರಣೆಯನ್ನು ಏಪ್ರಿಲ್ 5ರಿಂದ ನಡೆಸುವುದಾಗಿ ಹೈಕೋರ್ಟ್ ತಿಳಿಸಿದೆ.
ಅನುಮತಿ ಹಿಂಪಡೆದಿರುವ ಕ್ರಮವನ್ನು ಪ್ರಶ್ನಿಸಿ ಬಿಜೆಪಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಮತ್ತು ಸಿಬಿಐ ಸಲ್ಲಿಸಿರುವ ಪ್ರತ್ಯೇಕ ಅರ್ಜಿಗಳನ್ನು, ನ್ಯಾಯಮೂರ್ತಿ ಕೆ.ಸೋಮಶೇಖರ್ ನೇತೃತ್ವದ ವಿಭಾಗೀಯ ಪೀಠ ಶುಕ್ರವಾರ ವಿಚಾರಣೆ ನಡೆಸಿತು.
ಡಿ.ಕೆ.ಶಿವಕುಮಾರ್, ಸಿಬಿಐ ಮತ್ತು ಯತ್ನಾಳ್ ಪರ ವಕೀಲರ ವಾದಾಂಶ ಆಲಿಸಿದ ಪೀಠ ಏಪ್ರಿಲ್ 5ರಿಂದ ಅರ್ಜಿಗೆ ಸಂಬಂಧಿಸಿದ ಅಂತಿಮ ವಾದ-ಪ್ರತಿವಾದ ಆಲಿಸಲಾಗುವುದು ಎಂದು ತಿಳಿಸಿದೆ.