ಬೆಂಗಳೂರು: ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ 48 ಸಾವಿರ ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಬೇಕು ಎಂದು ಬಿಬಿಎಂಪಿ ಪೌರಕಾರ್ಮಿರ ಸಂಘದ ಅಧ್ಯಕ್ಷೆ ನಿರ್ಮಲಾ ಆಗ್ರಹಿಸಿದರು.
ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ ಭಾನುವಾರ ಹಮ್ಮಿಕೊಂಡಿದ್ದ ಪೌರಕಾರ್ಮಿಕರ ರಾಜ್ಯಮಟ್ಟದ ಹಕ್ಕೊ ತ್ತಾಯ ಸಮಾವೇಶದಲ್ಲಿ ಅವರು ಮಾತನಾಡಿದರು.
ರಾಜ್ಯದ ಎಲ್ಲ ಪೌರ ಕಾರ್ಮಿಕರನ್ನು ಕಾಯಂಗೊಳಿಸಲು ಸಂಘಟನೆ ಜುಲೈನಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಂಡಿತ್ತು. ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುವ ಎಲ್ಲಾ ಪೌರಕಾರ್ಮಿಕರನ್ನು ಕಾಯಂಗೊಳಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲಿಖಿತ ರೂಪದಲ್ಲಿ ಭರವಸೆ ನೀಡಿದ್ದರು. ಅದಕ್ಕಾಗಿ ಸಮಿತಿ ರಚಿಸಿದ್ದರು. ಸಮಿತಿ ವರದಿ ನೀಡುವ ಮೊದಲೇ 11 ಸಾವಿರ ಪೌರಕಾರ್ಮಿಕರನ್ನು ನೇಮಕ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ. ಎಲ್ಲರನ್ನೂ ಕಾಯಂಗೊಳಿಸುವವರೆಗೆ ಮತ್ತೆ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಪೌರ ಕಾರ್ಮಿಕರು ಅನುಭವಿಸುತ್ತಿರುವ ಎಲ್ಲಾ ಸಂಕಷ್ಟಗಳ ಪರಿಹಾರಕ್ಕಾಗಿ ಹಕ್ಕೊತ್ತಾಯ ಸಮಾವೇಶ ನಡೆಸುತ್ತಿದ್ದೇವೆ. ಬೇಡಿಕೆ ಈಡೇರುವವರೆಗೂ ವಿಶ್ರಮಿಸುವುದಿಲ್ಲ ಎಂದು ಘೋಷಿಸಿದರು.
ಎಐಸಿಸಿಟಿಯುನ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಪಣ್ಣ, ಪೌರಕಾರ್ಮಿರಿಗೆ ಸರ್ಕಾರ ಘನತೆ ಜೀವನವನ್ನು ಒದಗಿಸಿಕೊಡಬೇಕು. ಅದಕ್ಕಾಗಿ ಸೇವೆ ಕಾಯಂಗೊಳಿಸುವ ಜತೆಗೆ, ಇತರೆ ಎಲ್ಲ ಬೇಡಿಕೆಗಳನ್ನೂ ಈಡೇರಿಸಬೇಕು ಎಂದು ಒತ್ತಾಯಿಸಿದರು.
ತ್ಯಾಜ್ಯ ಸಾಗಿಸುವ ವಾಹನ ಚಾಲಕರ ಸಂಘದ ಪ್ರಧಾನ ಕಾರ್ಯದರ್ಶಿ ಕೇಶವ್, ತ್ಯಾಜ್ಯ ಸಾಗಿಸುವ ಎಲ್ಲಾ ವಾಹನ ಚಾಲಕರು ಮತ್ತು ಸಹಾಯಕರನ್ನು ಪೌರಕಾರ್ಮಿಕರೆಂದು ಪರಿಗಣಿಸಬೇಕು. ಗುತ್ತಿಗೆ ಪದ್ಧತಿ ರದ್ದು ಮಾಡಬೇಕು. ಜೀವನ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿದರು.
ಸಿಪಿಐ(ಎಂಎಲ್) ಲಿಬರೇಷನ್ ಪಕ್ಷದ ಕಾರ್ಯದರ್ಶಿ ಕ್ಲಿಫ್ಟನ್, ಮುನಿಯಮ್ಮ, ಪೌರಕಾರ್ಮಿಕರಾದ ರತ್ನಮ್ಮ ಉಪಸ್ಥಿತರಿದ್ದರು.