ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು | ದೇಗುಲ ಜಾಗದಲ್ಲಿ ಮಸೀದಿ ನಿರ್ಮಾಣ ಆರೋಪ: ನೋಟಿಸ್‌

Published 29 ಮೇ 2024, 23:40 IST
Last Updated 29 ಮೇ 2024, 23:40 IST
ಅಕ್ಷರ ಗಾತ್ರ

ಬೆಂಗಳೂರು: 'ಶ್ರೀರಂಗಪಟ್ಟಣದ ಮೂಡಲ ಬಾಗಿಲು ಆಂಜನೇಯ ಸ್ವಾಮಿ ದೇವಾಲಯವನ್ನು ಟಿಪ್ಪು ಸುಲ್ತಾನ್ ಆಡಳಿತಾವಧಿಯಲ್ಲಿ ಧ್ವಂಸಗೊಳಿಸಿ ಜಾಮಿಯಾ ಮಸೀದಿ ನಿರ್ಮಾಣ ಮಾಡಲಾಗಿದೆ. ಈ ಕುರಿತು ಉತ್ಖನನ ನಡೆಸಿ ವರದಿ ಸಲ್ಲಿಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾಲಯಕ್ಕೆ ನಿರ್ದೇಶಿಸಬೇಕು’ ಎಂದು ಕೋರಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಈ ಸಂಬಂಧ ಮಂಡ್ಯ ಜಿಲ್ಲೆಯ ಹಾಲಹಳ್ಳಿಯಲ್ಲಿ ಕೇಂದ್ರ ಕಚೇರಿ ಹೊಂದಿರುವ ಭಜರಂಗ ಸೇನೆಯ ರಾಜ್ಯ ಘಟಕದ ಅಧ್ಯಕ್ಷ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿತು.

ವಿಚಾರಣೆಯನ್ನು ಜುಲೈ 11 ಕ್ಕೆ ಮುಂದೂಡಲಾಗಿದೆ. ಅರ್ಜಿದಾರರ ಪರ ಹೈಕೋರ್ಟ್‌ ವಕೀಲ ಎಸ್‌.ಎಸ್‌.ರವಿಶಂಕರ್ ವಾದ ಮಂಡಿಸಿದರು.

ಅರ್ಜಿಯಲ್ಲಿ ಏನಿದೆ?: ‘ಮೂಡಲ ಬಾಗಿಲು ಆಂಜನೇಯ ಸ್ವಾಮಿ ದೇವಾಲಯವನ್ನು ವಿಜಯನಗರ ಸಾಮ್ರಾಜ್ಯ, ಮೈಸೂರು ಸಾಮ್ರಾಜ್ಯ ಹಾಗೂ ದಳವಾಯಿ ದೊಡ್ಡಯ್ಯ ಸೇರಿ ಅನೇಕ ಆಡಳಿತಗಾರರು ಪೋಷಿಸಿಕೊಂಡು ಬಂದಿದ್ದರು. ಆದರೆ, ಇದನ್ನು ಟಿಪ್ಪು ಸುಲ್ತಾನ್ ಧ್ವಂಸಗೊಳಿಸಿದ್ದು ಬಳಿಕ ಅದೇ ಜಾಗದಲ್ಲಿ ಬಳಿಕ ಜಾಮಿಯಾ ಮಸೀದಿ ನಿರ್ಮಿಸಲಾಗಿದೆ’ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿದೆ.

’ಈ ಬಗ್ಗೆ ಅಧ್ಯಯನ ಸರ್ವೆ ಹಾಗೂ ಉತ್ಖನನ ನಡೆಸಿ 30 ದಿನಗಳ ಒಳಗಾಗಿ ಹೈಕೋರ್ಟ್‌ಗೆ ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾಲಯಕ್ಕೆ ನಿರ್ದೇಶಿಸಬೇಕು. ದೇವಾಲಯದ ಆವರಣದಲ್ಲಿರುವ ಹಿಂದೂ ಸಂಸ್ಕೃತಿ ಹಾಗೂ ಪರಂಪರೆಯ ಕುರುಹುಗಳಾಗಿರುವ ಗರುಡ ಕಂಬ, ಕಲ್ಯಾಣಿ, ಸ್ತೂಪ, ಸ್ತಂಭ, ಹಿಂದೂ ದೇವ-ದೇವತೆಗಳ ಕಲ್ಲಿನ ಕೆತ್ತನೆಗಳು ಹಾಗೂ ಭೂಗತ ದೇವಸ್ಥಾನದ ಭಾಗ, ವಾಸ್ತು ಶಿಲ್ಪ, ಹೂತಿಟ್ಟ ವಿಗ್ರಹಗಳನ್ನು ಸಂರಕ್ಷಿಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾಲಯ, ರಾಜ್ಯ ಸರ್ಕಾರ, ಜಿಲ್ಲಾಡಳಿತಕ್ಕೆ ನಿರ್ದೇಶಿಸಬೇಕು’ ಎಂದು ಮನವಿ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT