ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಬಿಎಂಪಿ ಕಾಮಗಾರಿ ಅಕ್ರಮ ಆರೋಪ: ಎಸ್‌ಐಟಿ ನೇಮಕ ಆದೇಶಕ್ಕೆ ಹೈಕೋರ್ಟ್‌ ತಡೆ

Published 11 ಡಿಸೆಂಬರ್ 2023, 20:10 IST
Last Updated 11 ಡಿಸೆಂಬರ್ 2023, 20:10 IST
ಅಕ್ಷರ ಗಾತ್ರ

ಬೆಂಗಳೂರು: ‘ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ 2019ರಿಂದ 2023ರ ಮೇ ತಿಂಗಳ ಅವಧಿಯಲ್ಲಿ ನಡೆದಿರುವ ವಿವಿಧ ಕಾಮಗಾರಿಗಳಲ್ಲಿ ಅಕ್ರಮ ನಡೆದಿದೆ‘ ಎಂಬ ಆರೋಪಗಳ ಕುರಿತಂತೆ ತನಿಖೆ ನಡೆಸಲು ವಿಶೇಷ ತನಿಖಾ ಸಮಿತಿ (ಎಸ್‌ಐಟಿ) ನೇಮಕ ಮಾಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ.

ಸರ್ಕಾರದ ಆದೇಶ ಪ್ರಶ್ನಿಸಿ, ‘ಮೆಸರ್ಸ್‌ ನಿಕ್ಷೇಪ ಇನ್ಫ್ರಾ ಪ್ರಾಜೆಕ್ಟ್ಸ್’ ಸೇರಿದಂತೆ 17 ಗುತ್ತಿಗೆ ಕಂಪನಿಗಳು ಮತ್ತು 28 ಮಂದಿ ಗುತ್ತಿಗೆದಾರರು ಸಲ್ಲಿಸಿದ್ದ ರಿಟ್‌ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ. 

‘ಹೊಸ ಸರ್ಕಾರವು ಈ ಹಿಂದಿನ ಸರ್ಕಾರದ ನಿಲುವಿಗಿಂತಲೂ ಭಿನ್ನವಾದ ನಿಲುವು ಕೈಗೊಂಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ರಾಜ್ಯ ಸರ್ಕಾರ ತನ್ನ ಕ್ರಮದ ಕುರಿತು ಸಮರ್ಥನೆ ನೀಡಬೇಕಿದೆ. ಅದಕ್ಕಾಗಿ ತನಿಖಾ ಸಮಿತಿ ಮತ್ತು ಏಕವ್ಯಕ್ತಿ ತನಿಖಾ ಆಯೋಗ ರಚನೆ ಮಾಡಿರುವ ಸರ್ಕಾರದ ಆದೇಶ, ಅದಕ್ಕೆ ಸಂಬಂಧಿಸಿದ ಮುಂದಿನ ಎಲ್ಲಾ ಪ್ರಕ್ರಿಯೆಗಳಿಗೆ ತಡೆ ನೀಡಲಾಗಿದೆ‘ ಎಂದು ಆದೇಶದಲ್ಲಿ ವಿವರಿಸಲಾಗಿದೆ.

ಪ್ರಕರಣವೇನು?: ಬಿಬಿಎಂಪಿ ವ್ಯಾಪ್ತಿಯಲ್ಲಿ 2019ರಿಂದ 2023ರ ಮೇ ತಿಂಗಳ ಅವಧಿಯಲ್ಲಿ 15ನೇ ಹಣಕಾಸು ಆಯೋಗದ ಅನುದಾನ, ನಗರೋತ್ಥಾನ ಅನುದಾನ ಮತ್ತು ಬಿಬಿಎಂಪಿ ಅನುದಾನಗಳ ಅಡಿಯಲ್ಲಿ ಹಲವು ಕಾಮಗಾರಿ ನಡೆದಿದ್ದವು. ಕಾಮಗಾರಿಗಳ ಸಂಬಂಧ ಟೆಂಡರ್ ಪ್ರಕ್ರಿಯೆಯಲ್ಲಿ ನಿಯಮಗಳ ಉಲ್ಲಂಘನೆ, ನಿರ್ದಿಷ್ಟ ಗುತ್ತಿಗೆದಾರರನ್ನು ಬಿಟ್ಟು ನಕಲಿ ಗುತ್ತಿಗೆದಾರರಿಗೆ ಹಣ ಪಾವತಿ, ನಕಲಿ ಬಿಲ್ ಸೃಷ್ಟಿ, ಕಾಮಗಾರಿ ನಡೆಸದೆಯೇ ಬಿಲ್‌ ಪಾವತಿ, ಕಳಪೆ ಗುಣಮಟ್ಟದ ಕಾಮಗಾರಿ ನಡೆಸಿರುವುದೂ ಸೇರಿದಂತೆ ಹಲವು ಆರೋಪಗಳು ಕೇಳಿ ಬಂದಿದ್ದವು. ಈ ಕುರಿತು ತನಿಖೆ ನಡೆಸಲು ರಾಜ್ಯ ನಗರಾಭಿವೃದ್ಧಿ ಇಲಾಖೆಯು ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಪ್ರತ್ಯೇಕ ನಾಲ್ಕು ಸಮಿತಿಗಳನ್ನು ರಚನೆ ಮಾಡಲಾಗಿತ್ತು.

ಉಜ್ವಲ್ ಕುಮಾರ್ ಘೋಷ್ ನೇತೃತ್ವದಲ್ಲಿ ನಾಲ್ವರು ಸದಸ್ಯರನ್ನು ಒಳಗೊಂಡ ಘನತ್ಯಾಜ್ಯ ನಿರ್ವಹಣೆ ಕಾಮಗಾರಿ ತನಿಖಾ ಸಮಿತಿ, ಅಮ್ಲಾನ್ ಆದಿತ್ಯ ಬಿಸ್ವಾಸ್ ನೇತೃತ್ವದಲ್ಲಿ ಆರು ಸದಸ್ಯರನ್ನು ಒಳಗೊಂಡ ರಸ್ತೆ ಅಭಿವೃದ್ಧಿ ಕಾಮಗಾರಿ ಹಾಗೂ ಒಎಫ್‌ಸಿ ಕೇಬಲ್ ಅಳವಡಿಕೆಯ ಅಕ್ರಮ ತನಿಖಾ ಸಮಿತಿ, ಪಿ.ಸಿ.ಜಾಫರ್ ನೇತೃತ್ವದಲ್ಲಿ ನಾಲ್ವರು ಸದಸ್ಯರ ಬೃಹತ್ ನೀರುಗಾಲುವೆ, ಸ್ವಾಧೀನಾನುಭವ (ಒಸಿ) ನೀಡುವ ಅಕ್ರಮದ ತನಿಖಾ ಸಮಿತಿ ಮತ್ತು ಡಾ.ವಿಶಾಲ್ ನೇತೃತ್ವದಲ್ಲಿ ಆರು ಸದಸ್ಯರ ಕೆರೆ ಅಭಿವೃದ್ಧಿ, ಸ್ಮಾರ್ಟ್ ಸಿಟಿ ಹಾಗೂ ವಾರ್ಡ್‌ ಮಟ್ಟದ ಕಾಮಗಾರಿಗಳ ತನಿಖಾ ಸಮಿತಿಯನ್ನು ರಚಿಸಿ ಸರ್ಕಾರ ಆದೇಶ ಹೊರಡಿಸಿತ್ತು.  

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT