ಸೋಮವಾರ, 13 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೈಂಗಿಕ ದೌರ್ಜನ್ಯದ ಆರೋಪ: ರೇವಣ್ಣ, ಪ್ರಜ್ವಲ್‌ ವಿರುದ್ಧ ಎಫ್‌ಐಆರ್‌

Published 28 ಏಪ್ರಿಲ್ 2024, 16:25 IST
Last Updated 28 ಏಪ್ರಿಲ್ 2024, 16:25 IST
ಅಕ್ಷರ ಗಾತ್ರ

ಹಾಸನ/ಬೆಂಗಳೂರು: ಮನೆಯಲ್ಲಿ ಕೆಲಸಕ್ಕಿದ್ದ ಮಹಿಳೆ ಮತ್ತು ಅವರ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿ ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್‌.ಡಿ.ರೇವಣ್ಣ ಮತ್ತು ಅವರ ಮಗ, ಹಾಸನ ಕ್ಷೇತ್ರದ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

ಸಂತ್ರಸ್ತೆಯ ದೂರು ಆಧರಿಸಿ ಹೊಳೆನರಸೀಪುರ ನಗರ ಪೊಲೀಸ್‌ ಠಾಣೆಯಲ್ಲಿ ಭಾನುವಾರ ಎಫ್‌ಐಆರ್‌ ದಾಖಲಿಸಲಾಗಿದೆ. ರೇವಣ್ಣ ಅವರನ್ನೇ ಮೊದಲ ಆರೋಪಿಯನ್ನಾಗಿ ಮಾಡಿದ್ದು, ಪ್ರಜ್ವಲ್‌ ರೇವಣ್ಣ ಎರಡನೇ ಆರೋಪಿ ಎಂದು ಉಲ್ಲೇಖಿಸಲಾಗಿದೆ.

ಪ್ರಜ್ವಲ್‌ ರೇವಣ್ಣ ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪದ ತನಿಖೆಗೆ ನೇಮಿಸಿರುವ ವಿಶೇಷ ತನಿಖಾ ತಂಡಕ್ಕೆ ಪ್ರಕರಣ ವರ್ಗಾಯಿಸಿ ಗೃಹ ಇಲಾಖೆ ಆದೇಶ ಹೊರಡಿಸಿದೆ.

ರಾಜಕೀಯ ಪ್ರಭಾವ ಬಳಸಿಕೊಂಡು ಹಾಸನ ಜಿಲ್ಲೆಯಲ್ಲಿ ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಕ್ಕೆ ಸಂಬಂಧಿಸಿದ ವಿಡಿಯೊ ತುಣುಕುಗಳು ಹಲವು ದಿನಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದವು. ಈ ವಿಡಿಯೊಗಳಿದ್ದ ಪೆನ್‌ಡ್ರೈವ್‌ಗಳನ್ನು ದೊಡ್ಡ ಸಂಖ್ಯೆಯಲ್ಲಿ ಸಾರ್ವಜನಿಕನಾಗಿ ಸಿಗುವಂತೆ ನೋಡಿಕೊಳ್ಳಲಾಗಿತ್ತು. 

ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕೆಂಬ ಆಗ್ರಹ ಕೇಳಿಬಂದಿತ್ತು. ತನಿಖೆಯನ್ನು ಎಸ್‌ಐಟಿಗೆ ವಹಿಸುವಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯ ಪೊಲೀಸ್‌ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದರು. ಸರ್ಕಾರ ಶನಿವಾರ ಎಸ್‌ಐಟಿ ರಚಿಸಲು ನಿರ್ಧರಿಸಿತ್ತು. ಭಾನುವಾರವೇ ರೇವಣ್ಣ, ಪ್ರಜ್ವಲ್‌ ವಿರುದ್ಧ ಪ್ರಕರಣ ದಾಖಲಾಗಿದೆ.

ದೂರಿನಲ್ಲಿ ಏನಿದೆ?: ‘2019ರಲ್ಲಿ ಎಚ್.ಡಿ.ರೇವಣ್ಣ ಅವರ ಮನೆಯಲ್ಲಿ ಕೆಲಸಕ್ಕೆ ಸೇರಿ, ಮೂರೂವರೆ ವರ್ಷ ಕೆಲಸ ಮಾಡಿದ್ದೇನೆ. ಈ ವೇಳೆ ಎಚ್‌.ಡಿ.ರೇವಣ್ಣ ಅವರು ತಮ್ಮ ಕೊಠಡಿಗೆ ಬರುವಂತೆ ಆಹ್ವಾನಿಸುತ್ತಿದ್ದರು. ಸ್ಟೋರ್‌ ರೂಮ್‌ನಲ್ಲಿ ಕೈಹಿಡಿದು ಎಳೆಯುತ್ತಿದ್ದರು. ಮೈಮುಟ್ಟುತ್ತಿದ್ದರು. ಸೀರೆಯ ಪಿನ್‌ ಕಿತ್ತು ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದರು’ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

‘ಪ್ರಜ್ವಲ್‌ ರೇವಣ್ಣ ಸಹ, ಅಡುಗೆ ಮನೆಯಲ್ಲಿದ್ದಾಗ ಹಿಂದಿನಿಂದ ಬಂದು ಮೈಮುಟ್ಟುತ್ತಿದ್ದರು. ಹಲವಾರು ಬಾರಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ಮನೆಯಲ್ಲಿದ್ದಾಗ ವಿಡಿಯೊ ಕಾಲ್‌ ಮಾಡಿ, ನನ್ನ ಮಗಳ ಜೊತೆಗೆ ಅಸಭ್ಯವಾಗಿ ಮಾತನಾಡುತ್ತಿದ್ದರು. ಇದರಿಂದ ಹೆದರಿ ಅವರ ನಂಬರ್‌ ಬ್ಲಾಕ್‌ ಮಾಡಿದ್ದೆ. ಅಲ್ಲದೇ ಅವರ ಮನೆಯ ಕೆಲಸ ಬಿಟ್ಟು ಹೊರಬಂದಿದ್ದೆ’ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

‘ಇದೀಗ ಹಾಸನ ಜಿಲ್ಲೆಯಾದ್ಯಂತ ಪ್ರಜ್ವಲ್‌ ರೇವಣ್ಣ ನಡೆಸಿದ್ದಾರೆ ಎನ್ನಲಾಗುವ ಲೈಂಗಿಕ ದೌರ್ಜನ್ಯದ ವಿಡಿಯೊಗಳು ಹರಿದಾಡುತ್ತಿವೆ. ನನಗೂ ಕೆಲವು ವಿಡಿಯೊಗಳು ಬಂದಿವೆ. ನನ್ನ ಜೊತೆ ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಇನ್ನೊಬ್ಬ ಮಹಿಳೆಯ ಮೇಲೆ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ನಡೆಸಿರುವ ವಿಡಿಯೊ ಅದರಲ್ಲಿದೆ. ಇವುಗಳನ್ನು ನೋಡಿ ಭಯವಾಗಿದೆ. ಪತಿ ನನ್ನ ಶೀಲವನ್ನು ಶಂಕಿಸುತ್ತಿದ್ದಾರೆ. ನಿನ್ನ ವಿಡಿಯೊ ಬಂದರೆ ನಮ್ಮ ಗತಿ ಏನು ಎಂದು ಹೇಳುತ್ತಿದ್ದು, ಮಾನಸಿಕವಾಗಿ ಹಿಂಸೆಯಾಗಿದೆ. ಖಾಸಗಿ ವಾಹಿನಿಗೆ ಹೇಳಿಕೆ ನೀಡಿದ್ದರಿಂದ ಜೀವ ಭಯ ಉಂಟಾಗಿದೆ’ ಎಂದು ಹೇಳಿದ್ದಾರೆ. 

‘ನನ್ನ ಹಾಗೂ ಮಗಳ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ಎಸಗಿರುವ ಎಚ್‌.ಡಿ. ರೇವಣ್ಣ ಮತ್ತು ಪ್ರಜ್ವಲ್‌ ರೇವಣ್ಣ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.

ಪ್ರತಿಕ್ರಿಯಿಸದ ಆರೋಪಿಗಳು:

ಪ್ರಕರಣದ ಬಗ್ಗೆ, ಆರೋಪಿಗಳಾದ ಎಚ್‌.ಡಿ.ರೇವಣ್ಣ ಹಾಗೂ ಪ್ರಜ್ವಲ್‌ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಪ್ರಜ್ವಲ್‌ ವಿದೇಶಕ್ಕೆ ತೆರಳಿದ್ದಾರೆ ಎಂದು ಸರ್ಕಾರವೇ ಪ್ರಕಟಣೆ ಹೊರಡಿಸಿದೆ. ಅವರು ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಜರ್ಮನಿಯ ಫ್ರಾಂಕ್‌ಫರ್ಟ್‌ ನಗರಕ್ಕೆ ತೆರಳಿದ್ದಾರೆ ಎಂಬ ಮಾಹಿತಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಪ್ರಕರಣ ದಾಖಲಾದ ಬಳಿಕ ಎಚ್.ಡಿ.ರೇವಣ್ಣ ಬಹಿರಂಗವಾಗಿ ಕಾಣಿಸಿಕೊಂಡಿಲ್ಲ.

ರೇವಣ್ಣ

ರೇವಣ್ಣ

ಎಚ್‌.ಡಿ.ಕುಮಾರಸ್ವಾಮಿ
ಎಚ್‌.ಡಿ.ಕುಮಾರಸ್ವಾಮಿ
ಜಿ.ಪರಮೇಶ್ವರ
ಜಿ.ಪರಮೇಶ್ವರ
ಪ್ರಜ್ವಲ್‌ ರೇವಣ್ಣ ವಿರುದ್ಧದ ಆರೋಪಗಳ ಕುರಿತು ತನಿಖೆಗೆ ಎಸ್‌ಐಟಿ ರಚಿಸಿರುವ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುವೆ. ತನಿಖೆ ನಡೆದು ಸತ್ಯ ಹೊರಬರಲಿ
ಜಿ.ಟಿ.ದೇವೇಗೌಡ ಜೆಡಿಎಸ್ ಕೋರ್‌ ಕಮಿಟಿ ಅಧ್ಯಕ್ಷ
ಮಾಂಗಲ್ಯದ ಬಗ್ಗೆ ಮಾತನಾಡುವ ಮೋದಿಯವರು ತಾನು ಆಲಂಗಿಸುವ ಎಚ್‌.ಡಿ.ದೇವೇಗೌಡರ ಮೊಮ್ಮಗ ಸಂಸದ ಪ್ರಜ್ವಲ್‌ ಎಷ್ಟು ಮಹಿಳೆಯರ ತಾಳಿ ಕಿತ್ತಿದ್ದಾರೆ ಎಂದೂ ಹೇಳಬೇಕು
ಕೃಷ್ಣ ಬೈರೇಗೌಡ ಕಂದಾಯ ಸಚಿವ
ಎಫ್‌ಐಆರ್‌ನಲ್ಲಿರುವ ಆರೋಪಗಳೇನು?
ಲೈಂಗಿಕ ಕಿರುಕುಳ (ಐಪಿಸಿ ಸೆಕ್ಷನ್‌ 354 (ಎ)ಮಹಿಳೆಯನ್ನು ಹಿಂಬಾಲಿಸುವುದು (ಐಪಿಸಿ– 354 (ಡಿ)ಜೀವ ಬೆದರಿಕೆ (ಐಪಿಸಿ 506)ಮಹಿಳೆಯ ಮಾನಹಾನಿ (ಐಪಿಸಿ 509)
ತನಿಖೆ ಆರಂಭಿಸಿದ ಎಸ್‌ಐಟಿ
ಗೃಹ ಇಲಾಖೆ ಆದೇಶ ಹೊರಡಿಸಿದ ಬೆನ್ನಲ್ಲೇ ಪ್ರಜ್ವಲ್‌ ರೇವಣ್ಣ ವಿರುದ್ಧದ ಆರೋಪಗಳ ಕುರಿತು ವಿಶೇಷ ತನಿಖಾ ತಂಡದ (ಎಸ್‌ಐಟಿ) ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಹಿರಿಯ ಅಧಿಕಾರಿಗಳ ತಂಡವೊಂದು ಭಾನುವಾರವೇ ಹಾಸನ ಜಿಲ್ಲೆಗೆ ತೆರಳಿದೆ. ಸಿಐಡಿಯ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಬಿ.ಕೆ.ಸಿಂಗ್‌ ಅವರನ್ನು ಎಸ್‌ಐಟಿಯ ಮುಖ್ಯಸ್ಥರಾಗಿ ನೇಮಿಸಲಾಗಿದೆ. ಅವರೊಂದಿಗೆ ಡಿಜಿಪಿ ಕಚೇರಿಯಲ್ಲಿ ಸಹಾಯಕ ಐಜಿಪಿ ಆಗಿರುವ ಐಪಿಎಸ್‌ ಅಧಿಕಾರಿ ಸುಮನ್‌ ಡಿ.ಪೆನ್ನೇಕರ್‌ ಮತ್ತು ಮೈಸೂರು ಎಸ್‌.ಪಿ ಆಗಿರುವ ಸೀಮಾ ಲಾಠ್ಕರ್‌ ಅವರನ್ನು ಸದಸ್ಯೆಯರನ್ನಾಗಿ ನೇಮಿಸಲಾಗಿದೆ. ‘ಸಿಐಡಿ ಪೊಲೀಸ್‌ ಮಹಾನಿರ್ದೇಶಕರ ಮೇಲ್ವಿಚಾರಣೆಯಲ್ಲಿಯೇ ಎಸ್‌ಐಟಿ ಕಾರ್ಯನಿರ್ವಹಿಸಲಿದೆ’ ಎಂದು ಆದೇಶದಲ್ಲಿ ತಿಳಿಸಲಾಗಿದೆ. ತಂಡಕ್ಕೆ ಅಗತ್ಯವಿರುವ ಅಧಿಕಾರಿಗಳು ಸಿಬ್ಬಂದಿಯನ್ನು ಪೊಲೀಸ್‌ ಮಹಾನಿರ್ದೇಶಕರ ಅನುಮೋದನೆಯೊಂದಿಗೆ ನೇಮಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಲೈಂಗಿಕ ದೌರ್ಜನ್ಯ ಕುರಿತು ರಾಜ್ಯದ ಯಾವುದೇ ಠಾಣೆಯಲ್ಲಿ ದಾಖಲಾಗಿರುವ ಅಥವಾ ದಾಖಲಾಗಬಹುದಾದ ಪ್ರಕರಣಗಳನ್ನು ಎಸ್‌ಐಟಿಗೆ ವರ್ಗಾಸಲು ಆದೇಶಿಸಲಾಗಿದೆ. ‘ಹೊಳೆನರಸೀಪುರ ನಗರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ದೂರುದಾರರಾದ ಸಂತ್ರಸ್ತೆಯ ಹೇಳಿಕೆಯನ್ನು ಶೀಘ್ರದಲ್ಲಿ ದಾಖಲಿಸಲು ಎಸ್‌ಐಟಿ ಸಿದ್ಧತೆ ನಡೆಸಿದೆ. ವಿಡಿಯೊ ತುಣುಕುಗಳ ನೈಜತೆ ಪರೀಕ್ಷೆಗೂ ತಯಾರಿ ನಡೆದಿದೆ’ ಎಂದು ಮೂಲಗಳು ತಿಳಿಸಿವೆ.
‘ತನಿಖೆಯಲ್ಲಿ ಹಸ್ತಕ್ಷೇಪ ಇಲ್ಲ’ 
ಬೆಂಗಳೂರು: ‘ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಿಸಿದ ಆರೋಪಗಳ ಕುರಿತ ತನಿಖೆಯನ್ನು ಎಸ್‌ಐಟಿಗೆ ಒಪ್ಪಿಸಿದ್ದೇವೆ. ನಾವು ಒಮ್ಮೆ ಎಸ್‌ಐಟಿಗೆ ವಹಿಸಿದರೆ ಅವರು ಏನು ನಿರ್ಧಾರ ತೆಗೆದುಕೊಳ್ಳುತ್ತಾರೆಯೋ ಅದು ಅವರಿಗೆ ಬಿಟ್ಟಿದ್ದು. ನಾವು ಹಸ್ತಕ್ಷೇಪ ಮಾಡುವುದಿಲ್ಲ’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಪ್ರಜ್ವಲ್‌ ರೇವಣ್ಣ ಅವರು ವಿದೇಶಕ್ಕೆ ಹೋಗಿದ್ದರೆ ಎಸ್‌ಐಟಿ ತಂಡವೇ ಕರೆದುಕೊಂಡು ಬಂದು ತನಿಖೆ ನಡೆಸಲಿದೆ’ ಎಂದರು. ‘ಸಂತ್ರಸ್ತ ಮಹಿಳೆಯರು ಅನ್ಯಾಯದ ಬಗ್ಗೆ ಹೇಳಿಕೊಳ್ಳಲು ನಿಮ್ಮನ್ನು ಸಂಪರ್ಕಿಸಿದ್ದಾರಾ’ ಎಂಬ ಪ್ರಶ್ನೆಗೆ ಪರಮೇಶ್ವರ ‘ಚುನಾವಣೆಯಲ್ಲಿ ಕಾರ್ಯನಿರತನಾಗಿರುವುದರಿಂದ ನನ್ನನ್ನು ಯಾರೂ ಸಂಪರ್ಕಿಸಿಲ್ಲ. ಆದರೆ ಮುಖ್ಯಮಂತ್ರಿ ಮತ್ತು ಪೊಲೀಸ್‌ ಮಹಾನಿರ್ದೇಶಕರಿಗೆ ಮಹಿಳಾ ಆಯೋಗದವರು ಪತ್ರ ಬರೆದಿದ್ದಾರೆ. ಅದರ ಆಧಾರದಲ್ಲಿ ತನಿಖೆಗೆ ಆದೇಶಿಸಲಾಗಿದೆ. ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ ತೆಗೆದುಕೊಂಡಿದೆ’ ಎಂದರು.
‘ತಪ್ಪು ಮಾಡಿದ್ದರೆ ಶಿಕ್ಷೆಯಾಗಲೇಬೇಕು’
ಬೆಂಗಳೂರು: ‘ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ತಪ್ಪು ಮಾಡಿದ್ದರೆ ಶಿಕ್ಷೆಯಾಗಲೇಬೇಕು. ಉಪ್ಪು ತಿಂದವರು ನೀರು ಕುಡಿಯಲೇಬೇಕು’ ಎಂದು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಭಾನುವಾರ ಹೇಳಿದರು. ಪ್ರಜ್ವಲ್‌ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪದ ಕುರಿತ ಸುದ್ದಿಗಾರರಿಗೆ ಪ್ರಶ್ನೆಗೆ ‘ಈ ಕುರಿತು ತನಿಖೆಗೆ ಮುಖ್ಯಮಂತ್ರಿಯವರು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿರುವುದು ಗಮನಕ್ಕೆ ಬಂದಿದೆ. ಎಸ್‌ಐಟಿ ತನಿಖೆ ಪೂರ್ಣಗೊಳ್ಳಲಿ. ಸತ್ಯಾಂಶ ಏನು ಎಂಬುದು ಹೊರಬರಲಿ’ ಎಂದರು. ‘ನೆಲದ ಕಾನೂನಿನಲ್ಲಿ ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ. ತಪ್ಪು ಮಾಡಿದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ. ನಾನಾಗಲೀ ಎಚ್‌.ಡಿ. ದೇವೇಗೌಡರಾಗಲೀ ಸಂಕಷ್ಟ ಹೇಳಿಕೊಂಡು ಬಂದ ಮಹಿಳೆಯರನ್ನು ಗೌರವದಿಂದ ನಡೆಸಿಕೊಂಡಿದ್ದೇವೆ. ಮಹಿಳೆಯರ ಬಗ್ಗೆ ಸದಾ ಗೌರವದ ಭಾವನೆ ಹೊಂದಿದ್ದೇವೆ’ ಎಂದು ಹೇಳಿದರು. ಪ್ರಜ್ವಲ್‌ ವಿದೇಶಕ್ಕೆ ಪರಾರಿಯಾದ ಕುರಿತು ಪ್ರಶ್ನಿಸಿದಾಗ ‘ಪ್ರಜ್ವಲ್‌ ವಿದೇಶಕ್ಕೆ ಹೋಗಿದ್ದರೆ ಅದಕ್ಕೂ ನನಗೂ ಸಂಬಂಧ ಇಲ್ಲ. ಅವರು ತಪ್ಪಿಸಿಕೊಂಡಿದ್ದರೆ ಎಸ್‌ಐಟಿ ಅಧಿಕಾರಿಗಳು ಪತ್ತೆಹಚ್ಚಿ ಕರೆತರಲಿ. ಅದಕಾಗಿಯೇ ನೇಮಿಸಿರುವ ಅಧಿಕಾರಿಗಳಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT