ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ–4ರ ತುಮಕೂರು ರಸ್ತೆಯಲ್ಲಿರುವ ಪೀಣ್ಯ ಮೇಲ್ಸೇತುವೆಯಲ್ಲಿ 400 ಕೇಬಲ್ಗಳ ಬದಲಾವಣೆ ಕಾಮಗಾರಿ ಮುಕ್ತಾಯವಾಗಿ ಐದು ತಿಂಗಳು ಕಳೆದಿದ್ದರೂ ಭಾರಿ ವಾಹನ ಸಂಚಾರಕ್ಕೆ ಇನ್ನೂ ‘ಹಸಿರು ನಿಶಾನೆ’ ದೊರೆತಿಲ್ಲ. ಇದರಿಂದ ಈ ಮಾರ್ಗದಲ್ಲಿ ವಾಹನ ದಟ್ಟಣೆ ಸಮಸ್ಯೆ ಇನ್ನಷ್ಟು ಬಿಗಡಾಯಿಸಿದೆ.
ಭಾರಿ ವಾಹನಗಳ ಸಂಚಾರಕ್ಕೆ ಅನುಮತಿ ಸಿಗುವುದು ವಿಳಂಬವಾಗಿದ್ದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ವಾಹನ ಚಾಲಕರು ನರಕಯಾತನೆ ಅನುಭವಿಸುತ್ತಿದ್ದಾರೆ. ದಟ್ಟಣೆಯಲ್ಲಿ ಆಂಬುಲೆನ್ಸ್ಗಳು ಸಿಲುಕಿ ರೋಗಿಗಳ ಜೀವಕ್ಕೆ ಆಪತ್ತು ಎದುರಾಗುತ್ತಿದೆ. ನಗರದಲ್ಲಿ 15 ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಈ ಮಾರ್ಗದ ಹಲವು ಜಂಕ್ಷನ್ಗಳಲ್ಲಿ ಎರಡರಿಂದ ಮೂರು ಅಡಿ ನೀರು ಸಂಗ್ರಹಗೊಂಡು ಅಲ್ಲಲ್ಲಿ ವಾಹನಗಳು ಕೆಟ್ಟು ನಿಲ್ಲುತ್ತಿವೆ ಎಂದು ಸಂಚಾರ ಪೊಲೀಸರು ಹೇಳುತ್ತಾರೆ.
ಹಾಸನ, ತುಮಕೂರು, ದಾವಣಗೆರೆ, ಮಂಗಳೂರು ಸೇರಿದಂತೆ ಹಲವು ಜಿಲ್ಲೆಗಳಿಂದ ಸಂಜೆ ವೇಳೆಯಲ್ಲಿ ಸಾವಿರಾರು ವಾಹನಗಳು ನಗರ ಪ್ರವೇಶಿಸುತ್ತವೆ. ಸಂಜೆ ಧಾರಾಕಾರ ಮಳೆ ಆಗುತ್ತಿರುವ ಪರಿಣಾಮ ಸವಾರರು ಸಮಸ್ಯೆಗೆ ಸಿಲುಕುತ್ತಿದ್ದಾರೆ. ಪರ್ಯಾಯ ಮಾರ್ಗವಿಲ್ಲದೇ ವಾಹನಗಳು ಮೇಲ್ಸೇತುವೆ ಕೆಳ ಮಾರ್ಗದಲ್ಲೇ ಸಂಚರಿಸುತ್ತಿರುವ ಪರಿಣಾಮ ರಸ್ತೆಯಲ್ಲೇ ಕಾಲ ಕಳೆಯುವ ಸ್ಥಿತಿ ನಿರ್ಮಾಣವಾಗಿದೆ. ವಾಹನಗಳು ಸರಾಗವಾಗಿ ಮುಂದಕ್ಕೆ ಸಾಗಲು ಸಾಧ್ಯವಾಗುತ್ತಿಲ್ಲ. ಕಳೆದ ಎರಡು ದಿನಗಳಿಂದ ವಾಹನ ಸವಾರರ ಸ್ಥಿತಿ ಹೇಳತೀರದಾಗಿದೆ.
ಕೆನ್ನಮೆಟಲ್ (ವಿಡಿಯಾ) ಬಳಿಯ ಟೋಲ್ ಬಳಿ ವಾಹನಗಳು 1ರಿಂದ 2 ಕಿ.ಮೀ ಸಾಲುಗಟ್ಟಿ ನಿಲ್ಲುತ್ತಿವೆ. ಶನಿವಾರ ಸಂಜೆ ಹಾಗೂ ಭಾನುವಾರ ಸಂಜೆ ನೆಲಮಂಗಲದಿಂದ ಯಶವಂತಪುರಕ್ಕೆ ಹಾಗೂ ಯಶವಂತಪುರದಿಂದ ನೆಲಮಂಗಲದ ಕಡೆಗೆ ತೆರಳಲು ವಾಹನ ಸವಾರರಿಗೆ ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿತ್ತು ಎಂದು ಸವಾರರು ಅಳಲು ತೋಡಿಕೊಂಡರು.
‘ಮೇಲ್ಸೇತುವೆಯ ದುರಸ್ತಿ ಕಾರ್ಯ ಮುಕ್ತಾಯವಾಗಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ, ಯಾವ ಕಾರಣದಿಂದ ಅನುಮತಿ ನೀಡುತ್ತಿಲ್ಲ ಎಂಬುದು ಗೊತ್ತಾಗುತ್ತಿಲ್ಲ. ಅನುಮತಿ ನೀಡಿದರೆ ದೊಡ್ಡ ಸಮಸ್ಯೆ ತಪ್ಪಲಿದೆ’ ಎಂದು ಕ್ಯಾಬ್ ಚಾಲಕ ಮೋಹನ್ ಹೇಳಿದರು.
ಮತ್ತಷ್ಟು ವಿಳಂಬ: ‘ಮೇಲ್ಸೇತುವೆ 4 ಕಿ.ಮೀ ಇದ್ದು 1 ಕಿ.ಮೀನಲ್ಲಿ ಮಾತ್ರ 400 ಕೇಬಲ್ ಬದಲಾವಣೆ ಮಾಡಲಾಗಿದೆ. ಈ ಭಾಗದ ಸ್ಪ್ಯಾನ್ಗಳಲ್ಲಿ ಮಾತ್ರ ಸಾಮರ್ಥ್ಯ ಹೆಚ್ಚಾಗಿದೆ. ಉಳಿದ ಸ್ಪ್ಯಾನ್ಗಳಲ್ಲಿ 1,200 ಕೇಬಲ್ ಬದಲಾವಣೆ ಮಾಡಬೇಕು. ಕೇಬಲ್ ಬದಲಾವಣೆ ಆದ ಮೇಲೆ ಕಾಂಕ್ರೀಟ್ ಭರ್ತಿ ಮಾಡಬೇಕಿದ್ದು ಆಗ ಮೇಲ್ಸೇತುವೆಯಲ್ಲಿ ಯಾವುದೇ ವಾಹನ ಸಂಚಾರ ಇರಬಾರದು. ಮುಂದಿನ ವಾರ ಸಂಚಾರ ಪೊಲೀಸರ ಜತೆ ಚರ್ಚಿಸಿ ಉಳಿದ ಕೇಬಲ್ಗಳ ಬದಲಾವಣೆಗೆ ಕ್ರಮ ತೆಗೆದುಕೊಳ್ಳುತ್ತೇವೆ’ ಎಂದು ಹೆದ್ದಾರಿ ಪ್ರಾಧಿಕಾರದ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.
ಭಾರತೀಯ ವಿಜ್ಞಾನ ಸಂಸ್ಥೆಯ ತಜ್ಞರ ಜೊತೆಗೆ ಮುಂದಿನ ವಾರ ಸಭೆ ನಡೆಸಿ ಭಾರಿ ವಾಹನ ಸಂಚಾರಕ್ಕೆ ಅನುಮತಿ ನೀಡುವ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತೇವೆ.ಜಯಕುಮಾರ್ ಎಂಜಿನಿಯರ್ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.