ಬೆಂಗಳೂರು: ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಧರಣಿ ಮಂಗಳವಾರ ಅಂತ್ಯಗೊಂಡಿದೆ.
ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘ ನೇತೃತ್ವದಲ್ಲಿ ಸೋಮವಾರದಿಂದ ಧರಣಿ ಆರಂಭಿಸಲಾಗಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಥಳಕ್ಕೆ ಭೇಟಿ ನೀಡಿ, ಮನವಿ ಆಲಿಸಬೇಕೆಂದು ಪ್ರತಿಭಟನಕಾರರು ಪಟ್ಟು ಹಿಡಿದಿದ್ದರು.
‘ಅಧಿವೇಶನ ನಡೆಯುತ್ತಿದ್ದು, ರಾಜ್ಯದಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆಯುತ್ತಿವೆ. ಹೀಗಾಗಿ, ಪ್ರತಿಭಟನಾ ಸ್ಥಳಕ್ಕೆ ಬರಲು ಆಗುವುದಿಲ್ಲ. ನಿಯೋಗದಲ್ಲಿ ಬಂದು ಮನವಿ ನೀಡಿ’ ಎಂದು ಮುಖ್ಯಮಂತ್ರಿ ಸಂದೇಶ ಕಳುಹಿಸಿದ್ದರು. ಮುಖಂಡರ ನಿಯೋಗವು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿತು.
ಮನವಿ ಸ್ವೀಕರಿಸಿದ ಬೊಮ್ಮಾಯಿ, ‘ಬೇಡಿಕೆಗಳು ನ್ಯಾಯಯುತವಾಗಿವೆ. ಬಜೆಟ್ನಲ್ಲಿ ಈಡೇರಿಸಲು ಕ್ರಮ ಕೈಗೊಳ್ಳುತ್ತೇನೆ’ ಎಂದರು. ಅವರ ಭರವಸೆಗೆ ಮುಖಂಡರು ಒಪ್ಪಿದರು.
ತಮ್ಮೂರಿಗೆ ಹೊರಟರು: ಸ್ವಾತಂತ್ರ್ಯ ಉದ್ಯಾನಕ್ಕೆ ಬಂದ ಮುಖಂಡರು, ಧರಣಿ ಅಂತ್ಯಗೊಳಿಸುವುದಾಗಿ ಘೋಷಿಸಿದರು. ನಂತರ, ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ತಮ್ಮೂರಿನತ್ತ ಹೊರಟರು.