ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿ.ವಿ.ನಾಗೇಶ್ ಅವರು, ‘ತನಿಖೆ ನಡೆಸಿದ ಪೊಲೀಸರು ವಿಚಾರಣೆಯ ವಿಶೇಷ ನ್ಯಾಯಾಲಯಕ್ಕೆ 13 ಸಾವಿರ ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಇದನ್ನು ಕ್ಷಣಾರ್ಧದಲ್ಲಿ ಪರಿಶೀಲಿಸಿದ ನ್ಯಾಯಾಧೀಶರು ವಿಚಾರಣೆಗೆ ಮುಂದಾಗಿದ್ದಾರೆ. ಇದು ಮಕ್ಕಿ ಕಾ ಮಕ್ಕಿ ಪ್ರಕ್ರಿಯೆಯಂತಿದೆ. ಆದ್ದರಿಂದ ವಿಚಾರಣೆಗೆ ತಡೆ ನೀಡಬೇಕು’ ಎಂದು ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಾಧೀಶರು ತಡೆ ಆದೇಶ ನೀಡಿದ್ದು, ಪ್ರತಿವಾದಿಗಳಾದ ಬೆಂಗಳೂರು ಲೋಕಾಯುಕ್ತ ಡಿಎಸ್ಪಿ ಹಾಗೂ ದೂರುದಾರರೂ ಆದ ತೀರ್ಥಹಳ್ಳಿಯ ವಕೀಲ ಎಚ್.ಟಿ.ರವಿ ಅವರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದರು. ವಿಚಾರಣೆಯನ್ನು ಜುಲೈ 7ಕ್ಕೆ ಮುಂದೂಡಲಾಗಿದೆ.