ಜನೋಪಕಾರಿ ದೊಡ್ಡಣ್ಣಶೆಟ್ಟಿ ಅವರು ಈ ಸಂಸ್ಥೆ ಸ್ಥಾಪಿಸಿದ್ದು, 1905ರಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಅದಕ್ಕೆ ಚಾಲನೆ ನೀಡಿದ್ದರು. ಅಂದಿನಿಂದ ಬಡ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಸಂಸ್ಥೆ ಶ್ರಮಿಸುತ್ತಿದೆ. ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿ, ರವೀಂದ್ರನಾಥ ಟ್ಯಾಗೋರ್ ಕೂಡ ಇಲ್ಲಿ ಸಭೆ ನಡೆಸಿದ್ದರು. ಚಾರಿತ್ರಿಕ ಹಿನ್ನೆಲೆ ಹೊಂದಿರುವ ಈ ಸಂಸ್ಥೆಗೆ ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ಆಡಳಿತ ಮಂಡಳಿ ನೇಮಕ ಮಾಡಲಾಗುತ್ತಿದೆ. ಹಿಂದಿನ ಆಡಳಿತ ಮಂಡಳಿಯ ಅವಧಿ 2022ರ ಆಗಸ್ಟ್ 9ಕ್ಕೆ ಪೂರ್ಣಗೊಂಡಿದ್ದು, ಹೊಸ ಮಂಡಳಿ ನೇಮಕ ಆಗಬೇಕಿದೆ ಎಂದು ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.