ಬೆಂಗಳೂರು: ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿರುವಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ, ಮುಖ್ಯಮಂತ್ರಿಯ ನಿವಾಸ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಗೆಬುಧವಾರ (ಜು.29) ಮುತ್ತಿಗೆ ಹಾಕಲು ನಿರ್ಧರಿಸಿದೆ.
ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯದಾದ್ಯಂತ 42 ಸಾವಿರಆಶಾಕಾರ್ಯಕರ್ತೆಯರು ನಡೆಸುತ್ತಿರುವ ಮುಷ್ಕರ ಮಂಗಳವಾರ 19ನೇ ದಿನಕ್ಕೆ ತಲುಪಿದೆ.
‘ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಮಾಸಿಕ ನೀಡಲಾಗುತ್ತಿರುವ ₹ 6 ಸಾವಿರ ವೇತನವನ್ನು ₹12 ಸಾವಿರಕ್ಕೆ ಏರಿಕೆ ಮಾಡಬೇಕು. ಮುಖಗವಸು ಸೇರಿದಂತೆ ವೈಯಕ್ತಿಕ ಸುರಕ್ಷಾ ಸಾಧನಗಳನ್ನು ಒದಗಿಸಬೇಕು. ಕೋವಿಡ್ಗೆ ತುತ್ತಾದ ಆಶಾ ಕಾರ್ಯಕರ್ತೆಯರಿಗೆ ಪರಿಹಾರ ಹಾಗೂ ಸಂಪೂರ್ಣ ಚಿಕಿತ್ಸೆ ಒದಗಿಸಬೇಕು’ ಎಂದು ಸಂಘದ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ ಒತ್ತಾಯಿಸಿದ್ದಾರೆ. ಮುಷ್ಕರಕ್ಕೆ ವಿವಿಧ ಸಂಘಟನೆಗಳೂ ಬೆಂಬಲ ನೀಡಿವೆ.
ಕಾಂಗ್ರೆಸ್ ಬೆಂಬಲ: ‘ಮಾಸಿಕ ₹12 ಸಾವಿರ ವೇತನ ಸೇರಿದಂತೆ ಆಶಾ ಕಾರ್ಯಕರ್ತೆಯರ ಬೇಡಿಕೆಗ ಳನ್ನು ಈಡೇರಿಸಲು ಸರ್ಕಾರ ಮುಂದಾಗಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಒತ್ತಾಯಿಸಿದ್ದಾರೆ.
ಪ್ರತಿಭಟನೆ ಹಾಗೂ ಮುಖ್ಯಮಂತ್ರಿ ಮನೆಗೆ ಮುತ್ತಿಗೆ ಕಾರ್ಯಕ್ರಮ ಹಾಕಿಕೊಂಡಿರುವ ಆಶಾ ಕಾರ್ಯಕರ್ತೆಯರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
‘ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದರೂ ಮುಖ್ಯಮಂತ್ರಿಯಾಗಲಿ, ಸಚಿವರಾಗಲಿ ಸಮಸ್ಯೆ ಏನು ಎಂದು ಕೇಳುವ ಪ್ರಯತ್ನ ಮಾಡಿಲ್ಲ. ಹೀಗಾಗಿ ಅವರಿಗೆ ಬೆಂಬಲವಾಗಿ ನಿಲ್ಲುತ್ತೇವೆ’ ಎಂದು ತಿಳಿಸಿದ್ದಾರೆ.