ಬಾಗಲಕೋಟೆ: ಭಾರತಕ್ಕೆ ಪ್ರವಾಸಕ್ಕೆ ಬಂದಿದ್ದ ಆಸ್ಟ್ರೇಲಿಯಾದ ಪ್ರಜೆ ವಿಲಿಯಮ್ಸ್ ಕೈರನ್ ಜೇಮ್ಸ್ ಎಂಬ ವರ ಮೇಲೆ ಬಾದಾಮಿ ತಾಲ್ಲೂಕಿನ ಕೊಂಕಣಕೊಪ್ಪ ಗ್ರಾಮದಲ್ಲಿ ಸೋಮವಾರ ರಾತ್ರಿ ಮಾರಣಾಂತಿಕ ಹಲ್ಲೆ ನಡೆದಿದೆ. ಆದರೆ, ಹಲ್ಲೆಗೆ ನಿಖರ ಕಾರಣ ಗೊತ್ತಾಗಿಲ್ಲ.
ವಿಲಿಯಮ್ಸ್ ಸ್ಥಿತಿ ಗಂಭೀರವಾಗಿದ್ದು, ಬಾಗಲಕೋಟೆಯ ಕುಮಾರೇಶ್ವರ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತಡರಾತ್ರಿ ಆಸ್ಪತ್ರೆಗೆ ಕರೆತಂದಾಗಲೂ ಅವರ ಕೈ–ಕಾಲು ಕಟ್ಟಿದ ಸ್ಥಿತಿಯಲ್ಲಿಯೇ ಇತ್ತು.
ಮೆಲ್ಬರ್ನ್ ನಿವಾಸಿ ವಿಲಿಯಮ್ಸ್ ಬಾದಾಮಿಗೆ ಪ್ರವಾಸಕ್ಕೆ ಬಂದಿದ್ದು, ರಾತ್ರಿ ಸಮೀಪದ ಕೊಂಕಣಕೊಪ್ಪ ಗ್ರಾಮಕ್ಕೆ ಹೋಗಿದ್ದಾರೆ. ಕುಡಿದ ಮತ್ತಿನಲ್ಲಿದ್ದ ಅವರು, ಮನೆಗಳ ಒಳಗೆ ತೆರಳಿ ಅಸಭ್ಯವಾಗಿ ವರ್ತಿಸಿದ್ದಾರೆ. ಆಕ್ರೋಶಗೊಂಡ ಸ್ಥಳೀಯರು ಅವರ ಕೈ–ಕಾಲು ಕಟ್ಟಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.