ಬೆಂಗಳೂರು: ಇತ್ತೀಚೆಗಷ್ಟೇ ಜೈಲಿನಿಂದ ಜಾಮೀನು ಮೇಲೆ ಬಿಡುಗಡೆಯಾಗಿ ಬಂದಿದ್ದ ರೌಡಿ ಹಿದಾಯತ್ ಖಾನ್ ಎಂಬಾತನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದು, ತೀವ್ರ ಗಾಯಗೊಂಡಿರುವ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ನಂದಿನಿ ಲೇಔಟ್ ಠಾಣೆ ವ್ಯಾಪ್ತಿಯ ಲಗ್ಗೆರೆಯಲ್ಲಿ ಮಂಗಳವಾರ ಮಧ್ಯಾಹ್ನ 4.30ರ ಸುಮಾರಿಗೆ ಈ ಘಟನೆ ನಡೆದಿದೆ.
‘ಡಿ.ಜೆ.ಹಳ್ಳಿ ನಿವಾಸಿಯಾದ ಹಿದಾಯತ್ ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ. ಡಿ.ಜೆ.ಹಳ್ಳಿ ಠಾಣೆಯಲ್ಲೇ ಆತನ ವಿರುದ್ಧ ರೌಡಿ ಪಟ್ಟಿ ತೆರೆಯಲಾಗಿತ್ತು. ಹಳೆಯ ದ್ವೇಷದಿಂದಾಗಿ ಎದುರಾಳಿ ತಂಡದವರೇ ಆತನ ಮೇಲೆ ಹಲ್ಲೆ ಮಾಡಿರುವ ಅನುಮಾನವಿದೆ’ ಎಂದು ಪೊಲೀಸರು ಹೇಳಿದರು.
‘ವಾಹನದಲ್ಲಿ ಬಂದಿದ್ದರು ಎನ್ನಲಾದ ನಾಲ್ವರು ದುಷ್ಕರ್ಮಿಗಳು, ಹಿದಾಯತ್ ಮೇಲೆ ಮನಬಂದಂತೆ ಮಾರಕಾಸ್ತ್ರ ಬೀಸಿದ್ದಾರೆ. ಹಿದಾಯತ್ನ ಕೈ, ಕಾಲು ಹಾಗೂ ದೇಹದ ಹಲವೆಡೆ ಗಾಯಗಳಾಗಿವೆ. ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ’ ಎಂದೂ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.