ಬೆಂಗಳೂರು: ಅಪರಾಧ ಪ್ರಕರಣದಲ್ಲಿ ಜೈಲು ಸೇರಿ ಜಾಮೀನು ಮೇಲೆ ಹೊರಬಂದು ಪುನಃ ಕಳ್ಳತನ ಮಾಡುತ್ತಿದ್ದ ಆರೋಪಿ ರವಿಕುಮಾರ್ ಎಂಬಾತನನ್ನು ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ.
‘ಹಾಸನದ ರವಿಕುಮಾರ್, ಪದೇ ಪದೇ ಅಪರಾಧ ಕೃತ್ಯ ಎಸಗುತ್ತಿದ್ದ. ಆತನಿಂದ ₹ 6.30 ಲಕ್ಷ ಮೌಲ್ಯದ 149 ಗ್ರಾಂ ಚಿನ್ನಾಭರಣ ಹಾಗೂ ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.
‘ವೃತ್ತಿಯಲ್ಲಿ ಪೇಂಟರ್ ಆಗಿದ್ದ ರವಿಕುಮಾರ್, ಕೆಲಸಕ್ಕೆ ಹೋಗಿ ಬರುವ ವೇಳೆಯಲ್ಲಿ ಮನೆಗಳನ್ನು ಗುರುತಿಸಿ ಕಳ್ಳತನ ಮಾಡುತ್ತಿದ್ದ. ಮುನೇಶ್ವರನಗರದ 2ನೇ ಅಡ್ಡರಸ್ತೆಯಲ್ಲಿರುವ ಮನೆಯೊಂದರಲ್ಲಿ ಏಪ್ರಿಲ್ 30ರಂದು ಕಳ್ಳತನ ಎಸಗಿ ಪರಾರಿಯಾಗಿದ್ದ. ಮನೆ ಮಾಲೀಕರು ನೀಡಿದ್ದ ದೂರು ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ’ ಎಂದೂ ತಿಳಿಸಿದರು.
‘ರಾಜಗೋಪಾನಗರ, ಮಾದನಾಯಕನಹಳ್ಳಿ, ಹೊಳಲ್ಕೆರೆ, ಹೊಸದುರ್ಗ ಹಾಗೂ ಭದ್ರಾವತಿ ಠಾಣೆಯಲ್ಲೂ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದ್ದವು’ ಎಂದೂ ಹೇಳಿದರು.