ಸೋಮವಾರ, 25 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಜಿತ್‌ ರೈ ಜಾಮೀನು ಅರ್ಜಿ ವಜಾ

Published 21 ಜುಲೈ 2023, 19:30 IST
Last Updated 21 ಜುಲೈ 2023, 19:30 IST
ಅಕ್ಷರ ಗಾತ್ರ

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಅಸ್ತಿ ಹೊಂದಿರುವ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕೆ.ಆರ್‌. ಪುರ ತಾಲ್ಲೂಕಿನ ಹಿಂದಿನ ತಹಶೀಲ್ದಾರ್‌ ಅಜಿತ್‌ ಕುಮಾರ್‌ ರೈ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಪ್ರಕರಣಗಳ ವಿಶೇಷ ನ್ಯಾಯಾಲಯ ಶುಕ್ರವಾರ ಆದೇಶ ನೀಡಿದೆ.

ಲೋಕಾಯುಕ್ತ ಪೊಲೀಸರು ಜೂನ್‌ 28ರಂದು ಅಜಿತ್‌ ರೈ ಮನೆ ಮೇಲೆ ದಾಳಿಮಾಡಿ ಶೋಧ ನಡೆಸಿದ್ದರು. ವಿಚಾರಣೆಗೆ ಸಹಕರಿಸದ ಆರೋಪದ ಮೇಲೆ ಜೂನ್‌ 29ರಂದು ಬಂಧಿಸಲಾಗಿತ್ತು. ವಿಚಾರಣೆಗಾಗಿ ಕೆಲವು ದಿನಗಳ ಕಾಲ ತನಿಖಾ ತಂಡದ ವಶಕ್ಕೆ ನೀಡಲಾಗಿತ್ತು. ನಂತರ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಪ್ರಕರಣದಲ್ಲಿ ಜಾಮೀನು ನೀಡುವಂತೆ ಕೋರಿ ಅಜಿತ್‌ ರೈ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಆಕ್ಷೇಪಣೆ ಸಲ್ಲಿಸಿದ್ದ ಲೋಕಾಯುಕ್ತ ಪೊಲೀಸರು, ‘ಆರೋಪಿ ವಿರುದ್ಧ ತನಿಖೆ ಬಾಕಿ ಇದೆ. ಬಹಳಷ್ಟು ದಿನಗಳ ಕಾಲ ತನಿಖೆ ನಡೆಯಬೇಕಿದೆ. ಹಲವು ಆಯಾಮಗಳಲ್ಲಿ ತನಿಖೆ ಮುಂದುವರಿಯುತ್ತಿದೆ. ಈ ಸಂದರ್ಭದಲ್ಲಿ ಜಾಮೀನು ಮಂಜೂರು ಮಾಡಿದರೆ ತನಿಖೆಗೆ ಹಿನ್ನಡೆ ಆಗುವ ಅಪಾಯವಿದೆ’ ಎಂದು ಜಾಮೀನು ನೀಡುವುದನ್ನು ಬಲವಾಗಿ ವಿರೋಧಿಸಿದ್ದರು.

ಅರ್ಜಿದಾರರ ಪರ ವಕೀಲರು ಮತ್ತು ಲೋಕಾಯುಕ್ತ ಪೊಲೀಸರ ಪರ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಅವರ ವಾದಗಳನ್ನು ಆಲಿಸಿದ್ದ ನ್ಯಾಯಾಧೀಶ ಎಸ್‌.ವಿ. ಶ್ರೀಕಾಂತ್‌ ಆದೇಶ ಕಾಯ್ದಿರಿಸಿದ್ದರು. ಶುಕ್ರವಾರ ಆದೇಶ ಪ್ರಕಟಿಸಿದ್ದು, ಜಾಮೀನು ಕೋರಿ ಅಜಿತ್‌ ರೈ ಸಲ್ಲಿಸಿರುವ ಅರ್ಜಿಯನ್ನು ತಿರಸ್ಕರಿಸಿರುವುದಾಗಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT