ಬೆಂಗಳೂರು:ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಪ್ರಕರಣದಲ್ಲಿ ಆರೋಪಿಯಾಗಿರುವ ನಿತ್ಯಾನಂದ ಸ್ವಾಮೀಜಿಗೆ ನೀಡಿದ್ದ ಜಾಮೀನನ್ನು ಹೈಕೋರ್ಟ್ ರದ್ದುಪಡಿಸಿದೆ.
ಸ್ವಾಮೀಜಿಗೆ 2010ರಲ್ಲಿ ನೀಡಿರುವ ಜಾಮೀನು ರದ್ದುಪಡಿಸುವಂತೆ ಕೋರಿ ಪ್ರಕರಣದ ಮೂಲ ದೂರುದಾರ ಕುರುಪ್ಪನ್ ಲೆನಿನ್ ಸಲ್ಲಿಸಿದ್ದ ಅರ್ಜಿ ಮೇಲಿನ ಆದೇಶವನ್ನು ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ಪ್ರಕಟಿಸಿದೆ.
ಜಾಮೀನು ರದ್ದುಗೊಳಿಸಿರುವ ಬೆನ್ನಲ್ಲೇ ಆರೋಪಿಗೆ ನೀಡಿದ್ದ ಶ್ಯೂರಿಟಿ ಮೊತ್ತವನ್ನೂ ಮುಟ್ಟುಗೋಲು ಹಾಕಿಕೊಳ್ಳಲು ಆದೇಶಿಸಲಾಗಿದೆ. ಇದರಿಂದಾಗಿ ಸ್ವಾಮೀಜಿ ಬಂಧನದ ಭೀತಿ ಎದುರಿಸುವಂತಾಗಿದೆ.
‘ನಿತ್ಯಾನಂದ ಸ್ವಾಮೀಜಿ ಕೊನೆಯ ಬಾರಿಗೆ ವಿಚಾರಣಾ ನ್ಯಾಯಾಲಯದ ಮುಂದೆ 2018 ಜೂನ್ 5 ರಂದು ಹಾಜರಾಗಿದ್ದರು. ಆ ನಂತರ ವಿಚಾರಣೆಗೆ ಹಾಜರಾಗಿಲ್ಲ. ಅವಧಿ ಮುಗಿದ ಪಾಸ್ಪೋರ್ಟ್ ಬಳಸಿ ವಿದೇಶಕ್ಕೆ ಪರಾರಿಯಾಗಿದ್ದಾರೆ’ಲೆನಿನ್ ಪರ ವಕೀಲರು ಆರೋಪಿಸಿದ್ದರು.