ಬೆಂಗಳೂರು: ‘ಬನಶಂಕರಿ ಬಸ್ ನಿಲ್ದಾಣದ ಬಳಿ ಉಂಟಾಗಿರುವ ಸಂಚಾರ ದಟ್ಟಣೆ ನಿವಾರಿಸಲು ಸ್ಕೈವಾಕ್ ನಿರ್ಮಾಣಕ್ಕೆ ನಿರ್ಧರಿಸಲಾಗಿದ್ದು, ಈ ಕಾಮಗಾರಿ ಮೂರು ತಿಂಗಳ ಒಳಗಾಗಿ ಪೂರ್ಣಗೊಳ್ಳಲಿದೆ’ ಎಂದು ಸಂಸದ ತೇಜಸ್ವಿ ಸೂರ್ಯ ತಿಳಿಸಿದರು.
ಕಂದಾಯ ಸಚಿವ ಆರ್.ಅಶೋಕ ಹಾಗೂ ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ ಜತೆಗೆ ಸ್ಥಳ ಪರಿಶೀಲನೆ ನಡೆಸಿ ಅವರು ಮಾತನಾಡಿದರು.
ಬೆಂಗಳೂರು ದಕ್ಷಿಣದ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಒಂದಾಗಿರುವ ಬನಶಂಕರಿಯಲ್ಲಿ ದಿನಂಪ್ರತಿ ಸಾವಿರಾರು ಸಾರ್ವಜನಿಕರು ಸಂಚಾರ ದಟ್ಟಣೆಯಿಂದ ನಲುಗಿ ಹೋಗಿದ್ದಾರೆ. ಮೆಟ್ರೊ ನಿಲ್ದಾಣ ಮತ್ತು ಬಸ್ ನಿಲ್ದಾಣದ ನಡುವೆ ಸ್ಕೈವಾಕ್ ನಿರ್ಮಿಸಿದರೆ ಇದಕ್ಕೆ ಪರಿಹಾರ ಕಲ್ಪಿಸಲು ಸಾಧ್ಯ ಎಂದು ಅವರು ಹೇಳಿದರು.
ಸ್ಕೈವಾಕ್ ನಿರ್ಮಾಣಕ್ಕೆ ಅನಗತ್ಯ ವಿಳಂಬ ಮಾಡಿದರೆ ಅಂತಹ ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು ಎಂದು ಆರ್.ಅಶೋಕ ಎಚ್ಚರಿಸಿದರು.