ಬೆಂಗಳೂರು: ‘ಕೊರೊನಾ ಸಂದರ್ಭದಲ್ಲೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದುರ್ಬಲ ಹಾಗೂ ಹಿಂದುಳಿದ ಜನರಿಗಾಗಿ ಮಾನವ ಹಕ್ಕುಗಳನ್ನು ಸಂರಕ್ಷಿಸುವ ಅನಿವಾರ್ಯತೆ ಇದೆ’ ಎಂದು ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಶಿವರಾಜ ಪಾಟೀಲ ತಿಳಿಸಿದರು.
ಬೆಂಗಳೂರು ವಿಶ್ವವಿದ್ಯಾಲಯದ ಕಾನೂನು ಕಾಲೇಜು ವತಿಯಿಂದ ‘ಕೋವಿಡ್-19ರ ಸಂದರ್ಭದಲ್ಲಿ ಮಾನವ ಹಕ್ಕುಗಳ ಸಂರಕ್ಷಣೆ’ ಕುರಿತು ಶುಕ್ರವಾರ ಹಮ್ಮಿಕೊಂಡಿದ್ದ ಆನ್ಲೈನ್ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಕುಲಪತಿ ಕೆ.ಆರ್.ವೇಣುಗೋಪಾಲ್, ‘ಸಂವಿಧಾನದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಉಲ್ಲೇಖಿಸಿರುವ ಶಿಕ್ಷಣ, ಆರೋಗ್ಯ ಹಾಗೂ ಆಹಾರ ಹಕ್ಕುಗಳನ್ನು ಈ ಸಂದರ್ಭದಲ್ಲೂ ಸರ್ಕಾರಗಳು ಯಥಾವತ್ತಾಗಿ ಅನುಷ್ಠಾನ ಮಾಡಬೇಕಾಗಿದೆ’ ಎಂದರು.
ರಾಜ್ಯ ಕಾನೂನು ವಿಶ್ವವಿದ್ಯಾಲಯದ ಕುಲಪತಿ ಈಶ್ವರ ಭಟ್, ರಾಷ್ಟ್ರೀಯ ಕಾನೂನು ಶಾಲೆಯ ವಿಶ್ರಾಂತ ಕುಲಪತಿ ವೆಂಕಟರಾವ್, ಕಾನೂನು ಕಾಲೇಜಿನ ಪ್ರಾಂಶುಪಾಲ ಸುರೇಶ್ ವಿ.ನಾಡಗೌಡ, ಸಹ ನಿರ್ದೇಶಕ ಸುದೇಶ್ ಹಾಗೂ ದಶರಥ್, ಕಾರ್ಯಾಗಾರದ ಸಂಯೋಜಕ ಎನ್.ಸತೀಶ್ ಗೌಡ ಇದ್ದರು.