ಬೆಂಗಳೂರು: ‘ನಗರದ ಪ್ರಮುಖ ಸಮಸ್ಯೆಗಳಿಗೆ ತಾತ್ಕಾಲಿಕ ಪರಿಹಾರ ಹುಡುಕುವ ಬದಲು ಶಾಶ್ವತ ಪರಿಹಾರ ಕಂಡುಕೊಳ್ಳಬೇಕು’ ಎಂದು ಅಧಿಕಾರಿಗಳಿಗೆ ಮೇುಯರ್ ಎಂ. ಗೌತಮ್ಕುಮಾರ್ ಸಲಹೆ ನೀಡಿದರು.
ಬುಧವಾರ ಅಧಿಕಾರಿಗಳ ಸಭೆ ನಡೆಸಿದ ಅವರು, ‘ನಗರದಲ್ಲಿ ರಸ್ತೆಗುಂಡಿಗಳು ಹೆಚ್ಚಾಗಿವೆ. ಇದರಿಂದ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ರಸ್ತೆಗುಂಡಿ ಮುಚ್ಚಲು ಕೂಡಲೇ ಕ್ರಮ ವಹಿಸಿ’ ಎಂದು ತಾಕೀತು ಮಾಡಿದರು.
ಪಾಲಿಕೆಯ ಉದ್ಯಾನಗಳು, ಕೆರೆಗಳು ಮತ್ತು ಆಸ್ಪತ್ರೆಗಳ ಅಭಿವೃದ್ಧಿಗೆ ಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆ ಅನುದಾನ ಬಳಕೆ ಮಾಡಿಕೊಳ್ಳಲು ಸಿಎಸ್ಆರ್ ಕಾರ್ಯಾಗಾರ ನಡೆಸುವಂತೆ ವಿಶೇಷ ಆಯುಕ್ತರಿಗೆ ಸೂಚನೆ ನೀಡಿದರು.
ಆಯುಕ್ತ ಬಿ.ಎಚ್. ಅನಿಲ್ಕುಮಾರ್ ಮಾತನಾಡಿ, ‘ಮಳೆ ನೀರು ರಸ್ತೆಯಲ್ಲೇ ನಿಲ್ಲುತ್ತಿರುವ ಕಾರಣ ಗುಂಡಿಗಳು ಹೆಚ್ಚಾಗಿವೆ. ವೈಜ್ಞಾನಿಕವಾಗಿ ಗುಂಡಿಗಳನ್ನು ಮುಚ್ಚಬೇಕು’ ಎಂದು ಸೂಚಿಸಿದರು.