ಬೆಂಗಳೂರು: ವಿಧಾನಸೌಧದ ಮುಂಭಾಗದಲ್ಲಿ ಜಗಜ್ಯೋತಿ ಬಸವೇಶ್ವರ ಮತ್ತು ನಾಡಪ್ರಭು ಕೆಂಪೇಗೌಡರ ಪ್ರತಿಮೆಗಳ ಸ್ಥಾಪನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಭೂಮಿಪೂಜೆ ನೆರವೇರಿಸಿದರು.
ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಮತ್ತು ಸಂವಿಧಾನ ರಚನಾ ಸಮಿತಿ ಅಧ್ಯಕ್ಷರಾಗಿದ್ದ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಗಳು ವಿಧಾನಸೌಧದ ಮುಂಭಾಗದಲ್ಲಿವೆ. ಅವುಗಳ ಮಧ್ಯದಲ್ಲಿರುವ ಜಾಗದಲ್ಲಿ ಈ ಬಸವೇಶ್ವರ ಮತ್ತು ಕೆಂಪೇಗೌಡರ ಪ್ರತಿಮೆಗಳನ್ನು ಸ್ಥಾಪಿಸಲಾಗುತ್ತಿದೆ.
ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ತುಮಕೂರು ಸಿದ್ಧಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ, ಪಟ್ಟನಾಯಕನಹಳ್ಳಿಯ ಗುರುಗುಂಡ ಬ್ರಹ್ಮೇಶ್ವರ ಮಠದ ನಂಜಾವಧೂತ ಸ್ವಾಮೀಜಿ, ಪೇಜಾವರ ಮಠದ ವಿಶ್ವಪ್ರಸನ್ನ ಸ್ವಾಮೀಜಿ, ಚಿತ್ರದುರ್ಗ ಮಾದಾರ ಚೆನ್ನಯ್ಯ ಗುರುಪೀಠದ ಮಾದಾರ ಚೆನ್ನಯ್ಯ ಸ್ವಾಮೀಜಿ ಉಪಸ್ಥಿತಿಯಲ್ಲಿ ಪ್ರತಿಮೆಗಳ ಸ್ಥಾಪನೆಗೆ ಭೂಮಿಪೂಜೆ ನೆರವೇರಿತು.
ಎರಡು ತಿಂಗಳೊಳಗೆ ಅನಾವರಣ: ಭೂಮಿಪೂಜೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಬೊಮ್ಮಾಯಿ, ‘ಬಸವಣ್ಣನವರ ಆಧ್ಯಾತ್ಮಿಕ ಚಿಂತನೆಗಳು ಮತ್ತು ಕೆಂಪೇಗೌಡರ ಆಡಳಿತಕ್ಕೆ ಸಂಬಂಧಿಸಿದ ತತ್ವಗಳನ್ನು ನಾಡಿನ ಉದ್ದಗಲಕ್ಕೆ ತಲುಪಿಸಬೇಕಿದೆ. ಅದಕ್ಕೆ ಪೂರಕವಾಗಿ ಈ ಇಬ್ಬರೂ ಮಹನೀಯರ ಪ್ರತಿಮೆಗಳನ್ನು ವಿಧಾನಸೌಧದ ಮುಂಭಾಗದಲ್ಲಿ ಸ್ಥಾಪಿಸುತ್ತಿದ್ದೇವೆ. ಕರ್ನಾಟಕವು ಸಮಗ್ರವಾಗಿ ಅಭಿವೃದ್ಧಿ ಹೊಂದಿದ, ಸಾಮರಸ್ಯವಿರುವ, ಶ್ರೇಷ್ಠ ರಾಜ್ಯವಾಗುವುದಕ್ಕೆ ಈ ಇಬ್ಬರೂ ಮಹನೀಯರು ಪ್ರೇರಣೆಯಾಗಬೇಕು’ ಎಂದರು.
ಇಬ್ಬರು ಕೂಡ ನಾಡು ಕಟ್ಟಿದ ಮಹನೀಯರು. ಕಂದಾಯ ಸಚಿವ ಆರ್. ಅಶೋಕ ನೇತೃತ್ವದ ಉಪ ಸಮಿತಿಯು ಪ್ರತಿಮೆ ಸ್ಥಾಪನೆಯ ಕೆಲಸಗಳನ್ನು ವೇಗವಾಗಿ ಮಾಡುತ್ತಿದೆ. ಎರಡು ತಿಂಗಳೊಳಗೆ ಈ ಪ್ರತಿಮೆಗಳನ್ನು ಅನಾವರಣಗೊಳಿಸುವ ಗುರಿ ಇದೆ ಎಂದು ತಿಳಿಸಿದರು.