ದೇವಸ್ಥಾನ ಸಮಿತಿ ಅಧ್ಯಕ್ಷ ಎಂ .ರುದ್ರೇಶ್ ಅವರು ರಥೋತ್ಸವಕ್ಕೆ ಆಗಮಿಸಿದ್ದ ಭಕ್ತರಿಗೆ ತಲಾ ಎರಡು ಸೇರು ಕಡಲೆಕಾಯಿ, ಒಂದು ಜಲ್ಲೆ ಕಬ್ಬನ್ನು ವಿತರಿಸಿದರು. ನಂತರ ಮಾತನಾಡಿದ ಅವರು, ‘ಚೋಳರ ಕಾಲದಲ್ಲಿ ನಿರ್ಮಿಸಿದ ಬಸವಣ್ಣ ದೇವರನ್ನು ಪೂರ್ವಿಕರು ಪೂಜಿಸಿಕೊಂಡು ಬರುತ್ತಿದ್ದರು. ಈ ದೇವಾಲಯವನ್ನು ಜೀರ್ಣೋದ್ಧಾರಗೊಳಿಸಿದ ನಂತರ 16 ವರ್ಷಗಳಿಂದ ಕಡಲೆಕಾಯಿ ಪರಿಷೆ ಮತ್ತು ಸಂಕ್ರಾಂತಿ ಹಬ್ಬವನ್ನು ಆಚರಿಸಿಕೊಂಡು ಬರುತ್ತಿದ್ದೇವೆ. ಈ ಮೂಲಕ ಗ್ರಾಮೀಣ ಸಂಸ್ಕೃತಿಯನ್ನು ನಗರದ ಯುವ ಜನಾಂಗಕ್ಕೆ ಪರಿಚಯಿಸುತ್ತಿದ್ದೇವೆ‘ ಎಂದು ಹೇಳಿದರು.