ಬೆಂಗಳೂರು: ‘ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಎಲ್ಲ ಬಗೆಯ ಜಾಹೀರಾತು ನಿಷೇಧಿಸುವ ಹೊರಾಂಗಣ ಜಾಹೀರಾತು ಮತ್ತು ಸಾರ್ವಜನಿಕ ಸಂದೇಶ ಬೈಲಾ–2018 ಜಾರಿಗೆ ಬಂದಿದೆ’ ಎಂಬ ಅಂಶವನ್ನು ಹೈಕೋರ್ಟ್ ಪರಿಗಣಿಸಿದೆ.
ಅನಧಿಕೃತ ಜಾಹೀರಾತು ತೆರವು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ಮತ್ತು ನ್ಯಾಯಮೂರ್ತಿ ಎಚ್.ಟಿ.ನರೇಂದ್ರ ಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಜಿ.ಆರ್.ಮೋಹನ್, ‘ರಾಜ್ಯ ಸರ್ಕಾರ ಈ ಬೈ–ಲಾವನ್ನು ಮೂರು ತಿಂಗಳಲ್ಲಿ ಅನುಮೋದಿಸಬೇಕಿತ್ತು. ಆದರೆ ಅನುಮೋದಿಸದೇ ಹೋದ ಕಾರಣ, ಕರ್ನಾಟಕ ಪೌರಾಡಳಿತ ಕಾಯ್ದೆ-1976ರ ಕಲಂ 425ರ ಅಡಿಯಲ್ಲಿ ಡೀಮ್ಡ್ ಅನುಮೋದನೆ ಹೊಂದಿ ಜಾರಿಗೆ ಬಂದಂತಾಗಿದೆ’ ಎಂದು ತಿಳಿಸಿದರು.
ಇದೇ ವೇಳೆ ಅಡ್ವೊಕೇಟ್ ಜನರಲ್ ಉದಯ್ ಹೊಳ್ಳ ಅವರು ಬೈ–ಲಾದ ಕರಡು ನಿಯಮಗಳ ಪ್ರತಿಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು. ವಿಚಾರಣೆಯನ್ನು ಇದೇ 25ಕ್ಕೆ ಮುಂದೂಡಲಾಗಿದೆ.