ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೇಷರತ್‌ ಕ್ಷಮೆಯಾಚನೆ

ಮುಖ್ಯ ನ್ಯಾಯಮೂರ್ತಿ ಕೆಂಗಣ್ಣಿಗೆ ಗುರಿಯಾದ ಬಿಬಿಎಂಪಿ
Last Updated 4 ಫೆಬ್ರುವರಿ 2020, 19:26 IST
ಅಕ್ಷರ ಗಾತ್ರ

ಬೆಂಗಳೂರು: ಹೈಕೋರ್ಟ್‌ ಆದೇಶ ಪಾಲಿಸದೇ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ವಿಭಾಗೀಯ ನ್ಯಾಯಪೀಠದ ಕೆಂಗಣ್ಣಿಗೆ ಗುರಿಯಾಗಿದ್ದ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯುಕ್ತರು ಮಂಗಳವಾರ ಬೇಷರತ್‌ ಕ್ಷಮೆಯಾಚಿಸಿದ್ದಾರೆ.

‘ಬಿಬಿಎಂಪಿ ವ್ಯಾಪ್ತಿಯಲ್ಲಿನ ರಸ್ತೆ ಗುಂಡಿಗಳಿಂದ ಸಾರ್ವಜನಿಕರು ಸಾವು–ನೋವುಗಳಿಗೆ ಈಡಾಗುತ್ತಿದ್ದಾರೆ’ ಎಂದು ಆಕ್ಷೇಪಿಸಿ ಕೋರಮಂಗಲದ ವಿಜಯನ್ ಮೆನನ್ ಸೇರಿದಂತೆ ನಾಲ್ವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್‌. ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಬಿಬಿಎಂಪಿ ಆಯುಕ್ತ ಬಿ.ಎಚ್.ಅನಿಲ್ ಕುಮಾರ್ ಅವರ ಪ್ರಮಾಣ ಪತ್ರವನ್ನು ವಕೀಲರು ನ್ಯಾಯಪೀಠಕ್ಕೆ ಸಲ್ಲಿಸಿದರು.

ಯಾಕೆ ಕ್ಷಮೆ?: ಪರಿಹಾರ ನೀಡಿಕೆಗೆ ಸಂಬಂಧಿಸಿದಂತೆ ನ್ಯಾಯಪೀಠ, 2019ರ ನವೆಂಬರ್ 27ರಂದು ಪ್ರಮಾಣ ಪತ್ರ ಸಲ್ಲಿಸಿತ್ತು. ಈ ಪತ್ರದಲ್ಲಿ, ‘ಕೋರ್ಟ್ ಆದೇಶವನ್ನು ಮೇಯರ್, ಉಪ ಮೇಯರ್, ಆಡಳಿತ ಪಕ್ಷದ ನಾಯಕರು, ಬೃಹತ್ ಕಾಮಗಾರಿ, ಆರ್ಥಿಕ ಹಾಗೂ ತೆರಿಗೆ ಮತ್ತು ಸಾರ್ವಜನಿಕ ಆರೋಗ್ಯ ಸ್ಥಾಯಿ ಸಮಿತಿ ಹಾಗೂ ವಿರೋಧ ಪಕ್ಷದ ನಾಯಕರ ಮುಂದಿಡಲಾಗಿದೆ’ ಎಂದು ತಿಳಿಸಲಾಗಿತ್ತು.

ಇದಕ್ಕೆ ಕೆಂಡಾಮಂಡಲವಾಗಿದ್ದ ನ್ಯಾಯಪೀಠ, ‘ಹೈಕೋರ್ಟ್ ಆದೇಶ ಪಾಲಿಸುವುದು ಬಿಟ್ಟು ಈ ರೀತಿ ಏಕೆ ಚರ್ಚೆ ನಡೆಸಿದ್ದೀರಿ’ ಎಂದು ತರಾಟೆಗೆ ತೆಗೆದುಕೊಂಡಿತ್ತು.

‘ಅಂದಿನ ಸಭೆಯಲ್ಲಿ ಭಾಗವಹಿಸಿದ್ದವರ ಹೆಸರು, ವಿವರ ನೀಡಿ’ ಎಂದು ಬಿಬಿಎಂಪಿ ಆಯುಕ್ತರಿಗೆ ತಾಕೀತು ಮಾಡಿತ್ತು. ‘ಕೊಡದೇ ಹೋದರೆ, ನೀವೇ ತಪ್ಪಿತಸ್ಥರು ಎಂದು ಒಪ್ಪಿಕೊಳ್ಳಬೇಕು’ ಎಂದೂ ತಿಳಿಸಿತ್ತು. ಈ ಹಿನ್ನೆಲೆಯಲ್ಲಿ ಆಯುಕ್ತರು ಕ್ಷಮೆ ಕೋರಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ 5ರಂದು (ಬುಧವಾರ) ಆದೇಶ ಪ್ರಕಟಿಸುವುದಾಗಿ ನ್ಯಾಯಪೀಠ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT