ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆ ಕಾಮಗಾರಿಗಳ ಶೀಘ್ರ ಪೂರ್ಣಕ್ಕೆ ಸೂಚನೆ

ದಾಸರಹಳ್ಳಿ ವಲಯದ ಕಾಮಗಾರಿಗಳ ಪರಿಶೀಲನೆ
Last Updated 13 ಮೇ 2022, 18:58 IST
ಅಕ್ಷರ ಗಾತ್ರ

ಬೆಂಗಳೂರು: ‘ನೆಲಗದರನಹಳ್ಳಿ ಮುಖ್ಯ ರಸ್ತೆಯನ್ನು ₹20 ಕೋಟಿ ವೆಚ್ಚದಲ್ಲಿ 30 ಅಡಿಯಿಂದ 60 ಅಡಿಗೆ ವಿಸ್ತರಿಸುವ ಕೆಲಸ ಆರಂಭವಾಗಿದೆ. ಇದರಿಂದ ಈ ಭಾಗದಲ್ಲಿ ಬಹುತೇಕ ಸಂಚಾರ ದಟ್ಟಣೆ ‌ಕಡಿಮೆಯಾಗಲಿದ್ದು, ಅಭಿವೃದ್ಧಿ ಹಕ್ಕು ಹಸ್ತಾಂತರ (ಟಿಡಿಆರ್) ಪ್ರಕ್ರಿಯೆಯನ್ನು ಮುಗಿಸಿ ನಿಗದಿತ‌ ಸಮಯದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು’ ಎಂದು ಪಾಲಿಕೆಯ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಾಲಿಕೆಯ ದಾಸರಹಳ್ಳಿ ವಲಯ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಮುಖ್ಯ ಆಯುಕ್ತರು ಶುಕ್ರವಾರ ಪರಿಶೀಲಿಸಿದರು.

ಹೆಸರಘಟ್ಟ ಮುಖ್ಯ ರಸ್ತೆಯ (4 ಕಿ.ಮೀ ಉದ್ದ) ಅಭಿವೃದ್ಧಿ ಕಾಮಗಾರಿಯನ್ನು ₹15 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಂಡಿದ್ದು, ಜಲಮಂಡಳಿಯಿಂದ ಒಳಚರಂಡಿ ಹಾಗೂ ಕುಡಿಯುವ ನೀರಿನ ಕಾಮಗಾರಿ ಮುಗಿದಿದೆ. ರಸ್ತೆ ಡಾಂಬರೀಕರಣ ಪ್ರಕ್ರಿಯೆ ಪ್ರಾರಂಭವಾಗಿದೆ. ಈ ಪೈಕಿ ರಸ್ತೆ ದುರಸ್ತಿ ಕಾರ್ಯವನ್ನು ಕೂಡಲೇ ಮುಗಿಸಬೇಕು ಎಂದೂ ಅವರು ಸೂಚಿಸಿದರು.

ಅಬ್ಬಿಗೆರೆ ಮುಖ್ಯ ರಸ್ತೆಯಿಂದ (ಅರಣ್ಯ ರಸ್ತೆ) ವೈ ನಾಗ್ ಜಂಕ್ಷನ್ ಮೂಲಕ ಗಂಗಮ್ಮ ಗುಡಿ ಠಾಣೆಯವರೆಗೆ ₹9.5 ಕೋಟಿ ವೆಚ್ಚದಲ್ಲಿ 1.35 ಕಿ.ಮೀ ಉದ್ದದ ರಸ್ತೆಯನ್ನು 80 ಅಡಿಗೆ ರಸ್ತೆ ವಿಸ್ತರಿಸುವ ಕಾಮಗಾರಿ ಪ್ರಗತಿಯಲ್ಲಿದೆ. ರಸ್ತೆ ಬದಿ ಕಾಲುವೆ, ಪಾದಚಾರಿ ಮಾರ್ಗ ಸೇರಿದಂತೆ ಬಾಕಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದೂ ತುಷಾರ್‌ ಹೇಳಿದರು.

ಕಿರ್ಲೊಸ್ಕರ್ ಬಡಾವಣೆಯಲ್ಲಿ 110 ಹಳ್ಳಿ ರಸ್ತೆ ಪುನಶ್ಚೇತನ ಕಾರ್ಯ ಪರಿಶೀಲನೆ ನಡೆಸಿದ ಅವರು, ‘ಜೆಲ್ಲಿಯನ್ನು ಸಮರ್ಪಕವಾಗಿ ಹಾಕಿ ಡಾಂಬರೀಕರಣ ಮಾಡಬೇಕು. ರಸ್ತೆ ಪುನಶ್ಚೇತನ ಕಾರ್ಯ ಮುಗಿದ ನಂತರ ಮತ್ತೆ ರಸ್ತೆ ಅಗೆಯದಂತೆ ನೋಡಿಕೊಳ್ಳಬೇಕು’ ಎಂದರು.

ಚೊಕ್ಕಚಂದ್ರ ಕೆರೆಯು 27 ಎಕರೆಯಲ್ಲಿದ್ದು, ಶುದ್ಧ ನೀರು ಕೆರೆಗೆ ಸೇರುವ ಸಲುವಾಗಿ 1 ಎಂಎಲ್‌ಡಿಯ ತ್ಯಾಜ್ಯ ನೀರು ಸಂಸ್ಕರಣ ಘಟಕ ಸ್ಥಾಪಿಸಲಾಗಿದೆ. ಕೆರೆಯ ಬಳಿಯಿರುವ ರಾಜಕಾಲುವೆಯಲ್ಲಿ ವಾರ್ಷಿಕ ನಿರ್ವಹಣೆ ಗುತ್ತಿಗೆಯಡಿ ನಿರಂತರವಾಗಿ ಹೂಳೆತ್ತುವ ಕಾರ್ಯ ಮಾಡಬೇಕು. ಇದೇ ಸ್ಥಳದಲ್ಲಿ ಮಳೆಯಾದರೆ ರಾಜಕಾಲುವೆ ತುಂಬಿ ರಸ್ತೆ ಮೇಲೆ ನೀರು ಹರಿಯುತ್ತಿದ್ದು, ಅದನ್ನು ತಪ್ಪಿಸುವ ಸಲುವಾಗಿ ಪರ್ಯಾಯ ಕಾಲುವೆ ನಿರ್ಮಾಣ ಮಾಡಲು ಉದ್ದೇಶಿಸಲಾಗಿದ್ದು, ತ್ವರಿತವಾಗಿ ಕಾಮಗಾರಿ ಕೈಗೆತ್ತಿಕೊಂಡು ರಸ್ತೆ ಮೇಲೆ ನೀರು ಹರಿಯದಂತೆ ಕ್ರಮ ಕೈಗೊಳ್ಳಬೇಕು ಎಂದು ಅವರು ನಿರ್ದೇಶನ ನೀಡಿದರು.

ಮೇಡರಹಳ್ಳಿ ರಸ್ತೆಯಲ್ಲಿ ಜಲಮಂಡಳಿ ವತಿಯಿಂದ ಕುಡಿಯುವ ನೀರು ಹಾಗೂ ಒಳಚರಂಡಿ ಕೆಲಸ ಪೂರ್ಣಗೊಂಡಿದ್ದು, ರಸ್ತೆ ಪುನಶ್ಚೇತನ ಕಾರ್ಯವನ್ನು ಇನ್ನೂ ಪೂರ್ಣಗೊಳಿಸದೇ ಇರುವುದನ್ನು ಗಮನಿಸಿದ ಅವರು, ಕೂಡಲೇ ರಸ್ತೆ ಪುನಶ್ಚೇತನ ಕಾರ್ಯವನ್ನು ಪೂರ್ಣಗೊಳಿಸಬೇಕು ಎಂದು ಜಲಮಂಡಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ದೊಡ್ಡಬಿದರಕಲ್ಲು ಕಸ ಸಂಸ್ಕರಣಾ ಘಟಕವು 150 ಟನ್ ಕಸ ಸಂಸ್ಕರಿಸುವ ಸಾಮರ್ಥ್ಯ ಹೊಂದಿದ್ದು, ಸದ್ಯ ಪ್ರತಿನಿತ್ಯ 90 ರಿಂದ 100 ಟನ್ ಹಸಿ ಕಸವನ್ನು ಸ್ವೀಕರಿಸಲಾಗುತ್ತಿದೆ. ವಿವಿಧ ಹಂತಗಳಲ್ಲಿ 43 ದಿನಗಳಲ್ಲಿ ಗೊಬ್ಬರವಾಗಿ ಪರಿವರ್ತನೆಯಾಗಲಿದೆ. ಘಟಕದಿಂದ ಸ್ಥಳೀಯರಿಗೆ ಯಾವುದೇ ರೀತಿಯ ಸಮಸ್ಯೆ ಆಗದಂತೆ, ವಾಸನೆ ಬಾರದಂತೆ ತಂತ್ರಜ್ಞಾನ ಬಳಸಿಕೊಂಡು ಕೆಲಸ ಮಾಡಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT