ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರರ ಬಿಲ್ ಪಾವತಿ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಲ್ಲಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ವಿಫಲವಾಗಿರುವುದರಿಂದ ಎಲ್ಲ ಕಾಮಗಾರಿಗಳನ್ನು ಸ್ಥಗಿತಗೊಳಿಸಿ ಗುತ್ತಿಗೆದಾರರು ಸೋಮವಾರದಿಂದ ಪ್ರತಿಭಟನೆ ನಡೆಸಲಿದ್ದಾರೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಗುತ್ತಿಗೆದಾರರ ಸಂಘ ಹಾಗೂ ಬಿಬಿಎಂಪಿ ಕಾರ್ಯನಿರತ ಗುತ್ತಿಗೆದಾರರ ಸಂಘ ಸೇರಿದಂತೆ ಎಲ್ಲ ಗುತ್ತಿಗೆದಾರರು ಒಟ್ಟುಗೂಡಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ಅಂಬಿಕಾಪತಿ, ನಂದಕುಮಾರ್, ಕೆ.ಟಿ. ಮಂಜುನಾಥ್ ತಿಳಿಸಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಪೂರ್ಣಗೊಂಡಿರುವ ಕಾಮಗಾರಿಗಳಿಗೆ 25 ತಿಂಗಳಿಂದ ಬಿಲ್ ಪಾವತಿ ಮಾಡಿಲ್ಲ. ಹೊಸ ಆದೇಶಗಳಿಂದ ಸಾಕಷ್ಟು ತೊಂದರೆಯಾಗಿದೆ. ಈ ಬಗ್ಗೆ ಮುಖ್ಯ ಆಯುಕ್ತರನ್ನು ಐದಾರು ಬಾರಿ ಭೇಟಿ ಮಾಡಿ ಮನವಿ ಮಾಡಿದ್ದರೂ ಸ್ಪಂದಿಸಿಲ್ಲ. ಹೀಗಾಗಿ ಎಲ್ಲ ರೀತಿಯ ಕಾಮಗಾರಿಗಳನ್ನು ಸ್ಥಗಿತಗೊಳಿಸಿ ಸೋಮವಾರ ಬೆಳಿಗ್ಗೆ 11ಕ್ಕೆ ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಹೇಳಿದರು.