ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಬಿಎಂಪಿ ಚುನಾವಣೆ: ಮತ್ತೆ 3 ತಿಂಗಳ ಕಾಲಾವಕಾಶ ಕೋರಿಕೆ

Last Updated 23 ನವೆಂಬರ್ 2022, 20:57 IST
ಅಕ್ಷರ ಗಾತ್ರ

ಬೆಂಗಳೂರು:‘ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) 243 ವಾರ್ಡ್‌ಗಳಿಗೆ ನವೆಂಬರ್ 30 ರೊಳಗೆ ಮೀಸಲಾತಿ ನಿಗದಿಪಡಿಸಬೇಕು ಹಾಗೂ ಡಿಸೆಂಬರ್ 31ರೊಳಗೆ ಚುನಾ ವಣೆ ನಡೆಸಬೇಕು‘ ಎಂದು ಹೈಕೋರ್ಟ್‌ ಸೆಪ್ಟೆಂಬರ್ 30ರಂದು ನೀಡಿರುವ ಆದೇಶ ಪಾಲನೆಗೆ ಮೂರು ತಿಂಗಳ ಕಾಲ ಅವಧಿ ವಿಸ್ತರಿಸುವಂತೆ ಕೋರಿ ನಗರಾಭಿವೃದ್ಧಿ ಇಲಾಖೆ ಹೈಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿದೆ.

ಪ್ರಮಾಣ ಪತ್ರದಲ್ಲೇನಿದೆ?:ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸುವ ಸಂಬಂಧ ನ್ಯಾಯಮೂರ್ತಿ ಭಕ್ತವತ್ಸಲ ಆಯೋಗ ವರದಿ ಸಲ್ಲಿಸಿತ್ತು. ಆದರೆ, ಹೈಕೋರ್ಟ್ ನಿರ್ದೇಶನಗಳ ಆಧಾರದಲ್ಲಿ ವರದಿಯನ್ನು ಪುನರ್ ಪರಿಶೀಲಿಸಿ ಪರಿಷ್ಕೃತ ವರದಿ ಸಲ್ಲಿ ಸಲು ನ್ಯಾಯಮೂರ್ತಿ ಭಕ್ತವತ್ಸಲ ಆಯೋಗಕ್ಕೆ ಮನವಿ ಮಾಡಲಾಗಿತ್ತು. ಅದರಂತೆ, ಅಕ್ಟೋಬರ್ 31ಕ್ಕೆ ಪೂರಕ ವರದಿ ಸಲ್ಲಿಸಿದ ಆಯೋಗ, ‘ಈ ಹಿಂದೆ ಸಲ್ಲಿಸಿದ್ದ ವರದಿ ಕಾನೂನುಬದ್ಧವಾಗಿದ್ದು, ಬದಲಾವಣೆಯ ಅವಶ್ಯಕತೆ ಇಲ್ಲ’ ಎಂದು ಸ್ಪಷ್ಟಪಡಿಸಿತ್ತು.

‘243 ವಾರ್ಡ್‌ಗಳಲ್ಲಿ ಎಸ್ಸಿ, ಎಸ್ಟಿ ವರ್ಗಗಳಿಗೆ ಮೀಸಲಾತಿ ನಿಗದಿಪಡಿಸಿದ ಬಳಿಕ ಹಿಂದುಳಿದ ವರ್ಗ ಎ ಮತ್ತು ಬಿ ಗೆ ಮೀಸಲಾತಿ ನಿಗದಿಪಡಿಸಲು ಇರುವ ವಿಧಾನವೇನು?, ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್‌ನ ನಿರ್ದೇಶನದ ಪ್ರಕಾರ ರಾಜಕೀಯ ಮೀಸಲಾತಿಗೆ ಅರ್ಹರಿರುವ ಹಿಂದುಳಿದ ವರ್ಗಗಳ ವಿವರವಾದ ಪಟ್ಟಿಯನ್ನು ಸಲ್ಲಿಸುವಂತೆ ಹಾಗೂ ಪೂರಕ ವರದಿಯಲ್ಲಿ ಸಲ್ಲಿಸಲಾಗಿರುವ ಹಿಂದುಳಿದ ವರ್ಗಗಳ ಜನಸಂಖ್ಯೆಯ ವಾಸ್ತವ ದತ್ತಾಂಶದ (ಎಂಪೆರಿಕಲ್ ಡಾಟಾ) ದೃಢೀಕರಣವೇನು? ಎಂಬ ಅಂಶಗಳನ್ನು ಪರಿಶೀಲಿಸುವಂತೆ ನವೆಂ ಬರ್ 17 ರಂದು ಆಯೋಗಕ್ಕೆ ಪತ್ರ ಬರೆಯಲಾಗಿದೆ. ಇದನ್ನು ಪರಿಶೀಲಿಸಿ ಆದಷ್ಟು ಬೇಗ ಪ್ರತಿಕ್ರಿಯಿಸುವುದಾಗಿ ಆಯೋಗ ಹೇಳಿದೆ.

ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಹೊಸದಾಗಿ ಮೀಸಲಾತಿ ನಿಗದಿಪಡಿಸಬೇಕೇ ಬೇಡವೇ ಎಂಬ ತೀರ್ಮಾನಕ್ಕೆ ಬರಲು ಆಯೋಗದ ನಿಲುವು ಮುಖ್ಯವಾಗಿದೆ. ತದ ನಂತರವಷ್ಟೇ ಅರ್ಹ ಹಿಂದುಳಿದ ವರ್ಗಗಳಿಗೆ ನ್ಯಾಯಸಮ್ಮತ ಮೀಸಲಾತಿ ಒದಗಿಸಲು ಸರ್ಕಾರಕ್ಕೆ ಸಾಧ್ಯವಾಗಲಿದೆ’ ಎಂದು ಪ್ರಮಾಣಪತ್ರದಲ್ಲಿ ವಿವರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT