ಬೆಂಗಳೂರು: ‘ಇನ್ನೆರಡು ತಿಂಗಳಲ್ಲಿ ಮಳೆಗಾಲ ಪ್ರಾರಂಭವಾಗಲಿದ್ದು, ಯಾವುದೇ ಅನಾಹುತ–ಅವಘಡಗಳಿಗೆ ಆಸ್ಪದ ನೀಡದಂತೆ ಎಲ್ಲ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು’ ಎಂದದು ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಅಧಿಕಾರಿಗಳಿಗೆ ಸೂಚಿಸಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ನಿಯಂತ್ರಣ, ಮಳೆಗಾಲದ ಸಿದ್ಧತೆ ಬಗ್ಗೆ ಶನಿವಾರ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
‘ಕಾಮಗಾರಿಗಳನ್ನು ಕಾಲಮಿತಿಯೊಳಗೆಪೂರ್ಣಗೊಳಿಸಬೇಕು. ರಸ್ತೆ ಬದಿಯ ಚರಂಡಿ ಅಥವಾ ಮೋರಿಗಳಿಂದ ಹೂಳು ತೆಗೆದು ನೀರು ಸರಿಯಾಗಿ ಹರಿಯುವಂತೆ ವ್ಯವಸ್ಥೆ ಮಾಡಬೇಕು. ಪಾದಚಾರಿ ಮಾರ್ಗಗಳನ್ನು ದುರಸ್ತಿ ಮಾಡಬೇಕು. ರಸ್ತೆ ಬದಿ ಸುರಿದಿರುವ ಕಟ್ಟಡದ ಅವಶೇಷಗಳನ್ನು ತೆರವುಗೊಳಿಸಬೇಕು’ ಎಂದು ಸೂಚನೆ ನೀಡಿದರು.
‘ಮಳೆಗಾಲದ ನಾಲ್ಕು ತಿಂಗಳು ವಾರ್ಡ್ ಮಟ್ಟದಲ್ಲಿ 63 ತಾತ್ಕಾಲಿಕ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗುತ್ತದೆ. ಉರುಳಿ ಬೀಳುವ ಮರ ಹಾಗೂ ಕೊಂಬೆಗಳನ್ನು ತೆರವುಗೊಳಿಸಲು ಅಗತ್ಯ ಸಿಬ್ಬಂದಿ, ಸಲಕರಣೆ ಹಾಗೂ ವಾಹನಗಳ ವ್ಯವಸ್ಥೆ ಮಾಡಿಕೊಳ್ಳಲಾಗುತ್ತದೆ. ಜಲಾವೃತಗೊಳ್ಳುವ ಪ್ರದೇಶಗಳಲ್ಲಿ 45 ಎಚ್ಪಿ ಸಾಮರ್ಥ್ಯದ ಪಂಪ್ಗಳಿಂದ ನೀರೆತ್ತಲು ವ್ಯವಸ್ಥೆ ಮಾಡಿಕೊಳ್ಳಲಾಗುತ್ತದೆ’ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
ಮುಖ್ಯ ಆಯುಕ್ತ ಗೌರವ್ ಗುಪ್ತಾ, ವಿಶೇಷ ಆಯುಕ್ತರಾದ ರಾಜೇಂದ್ರ ಚೋಳನ್, ಮನೋಜ್ ಜೈನ್, ರೆಡ್ಡಿ ಶಂಕರ ಬಾಬು, ಎಸ್.ಬಸವರಾಜು, ಡಿ.ರಂದೀಪ್, ತುಳಸಿ ಮದ್ದಿನೇನಿ, ಎಸ್.ಜಿ.ರವೀಂದ್ರ, ಮುಖ್ಯ ಆರೋಗ್ಯಾಧಿಕಾರಿ ಡಾ.ವಿಜಯೇಂದ್ರ ಉಪಸ್ಥಿತರಿದ್ದರು.