ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಬಿಎಂಪಿ ಪೌರಕಾರ್ಮಿಕರನ್ನು ಕಾಯಂಗೊಳಿಸಿ: ಪೌರಕಾರ್ಮಿಕರ ಸಂಘ ಆಗ್ರಹ

Last Updated 1 ಫೆಬ್ರುವರಿ 2023, 12:56 IST
ಅಕ್ಷರ ಗಾತ್ರ

ಬೆಂಗಳೂರು: ಬಿಬಿಎಂಪಿ ಘನತ್ಯಾಜ್ಯ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ವಾಹನ ಚಾಲಕರು, ಸಹಾಯಕರು, ಲೋಡರ್‌ಗಳು, ಕ್ಲೀನರ್‌ಗಳನ್ನು ನೇರ ಪಾವತಿಗೆ ಒಳಪಡಿಸಿ, ಕಾಯಂಗೊಳಿಸಬೇಕು ಎಂದು ಎಐಸಿಸಿಟಿಯು ಬೆಂಬಲಿತ ಬಿಬಿಎಂಪಿ ಪೌರಕಾರ್ಮಿಕರ ಸಂಘ ಆಗ್ರಹಿಸಿದೆ.

‘ಬಿಬಿಎಂಪಿ ಘನತ್ಯಾಜ್ಯ ನಿರ್ವಹಣೆಯ ಕೆಲಸ ಕಾನೂನು ಪ್ರಕಾರ ಕಡ್ಡಾಯವಾಗಿ ಮಾಡಲೇ ಬೇಕಾಗಿದ್ದು, ಇದು ನಿರಂತರ ಸ್ವರೂಪದ ಕೆಲಸವಾಗಿದೆ. ಈಗಾಗಲೇ ಕಸ ಗುಡಿಸುವ ಪೌರಕಾರ್ಮಿಕರಿಗೆ ನೇರವೇತನ ಪಾವತಿ ಮಾಡಲಾಗಿದೆ. ಆದರೆ, ಮನೆ ಮನೆಗೆ ಹೋಗಿ ಕಸ ಸಂಗ್ರಹಿಸುವ ಮತ್ತು ಕಸ ವಿಲೇವಾರಿ ಮಾಡುವ ಪೌರಕಾರ್ಮಿಕರನ್ನು ಗುತ್ತಿಗೆ ವ್ಯವಸ್ಥೆಯಡಿಯಲ್ಲಿ ನೇಮಕ ಮಾಡಿಕೊಳ್ಳಲಾಗಿದೆ’ ಎಂದು ಸಂಘದ ಅಧ್ಯಕ್ಷೆ ನಿರ್ಮಲಾ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

‘ಗುತ್ತಿಗೆ ಆಧಾರದಲ್ಲಿರುವ ಪೌರಕಾರ್ಮಿಕರನ್ನು ಹಂತ–ಹಂತವಾಗಿ ಕಾಯಂಗೊಳಿಸುವವರೆಗೂ ಸಕಾಲಕ್ಕೆ ಕನಿಷ್ಠ ವೇತನ ಪಾವತಿಸಿ, ವೇತನ ಚೀಟಿ ನೀಡಬೇಕು. 3 ರಿಂದ 8 ತಿಂಗಳವರೆಗೆ ಬಾಕಿ ಇರುವ ವೇತನವನ್ನು ಪಾವತಿಸಿ, ಸಮಾನ ಕೆಲಸಕ್ಕೆ ಸಮಾನ ವೇತನ, ಹೆಚ್ಚುವರಿ ಕೆಲಸಕ್ಕೆ ಅಧಿಕ ವೇತನ ನೀಡುವ ಪದ್ಧತಿ ಜಾರಿಗೊಳಿಸಬೇಕು. ಬಿಬಿಎಂಪಿ ಅಡಿಯಲ್ಲಿರುವ ಬೆಂಗಳೂರು ಸಾಲಿಡ್ ವೇಸ್ಟ್‌ ಮ್ಯಾನೇಜ್‌ಮೆಂಟ್‌ನವರು 2023ರ ಜ. 21ರಂದು ಘನತ್ಯಾಜ್ಯ ನಿರ್ವಹಣೆ ಮಾಡಲು ಕರೆದಿರುವ ಟೆಂಡರ್‌ ಪ್ರಕ್ರಿಯೆಯನ್ನು ಕೂಡಲೇ ರದ್ದುಗೊಳಿಸಬೇಕು’ ಎಂದು ಒತ್ತಾಯಿಸಿದರು.

‘ವಿಶ್ರಾಂತಿ ಕೊಠಡಿ, ಶೌಚಾಲಯ, ಕುಡಿಯುವ ನೀರು ಮತ್ತು ಪೌಷ್ಟಿಕ ಆಹಾರವನ್ನು ಒದಗಿಸಬೇಕು. ಇ.ಎಸ್‌.ಐ ಮತ್ತು ಪಿ.ಎಫ್‌ ಸೌಲಭ್ಯವನ್ನು ಕಲ್ಪಿಸಿ, ಸುರಕ್ಷಾ ಪರಿಕರಗಳನ್ನು ನೀಡಬೇಕು. ಕಸ ಸಂಗ್ರಹಿಸುವ ಆಟೊಗಳ ದುರಸ್ತಿ ವೆಚ್ಚವನ್ನು ಬಿಬಿಎಂಪಿಯೇ ಭರಿಸಬೇಕು. ಸರ್ಕಾರಿ ರಜೆ ಮತ್ತು ರಾಷ್ಟ್ರೀಯ ಹಬ್ಬದ ದಿನಗಳು ಒಳಗೊಂಡಂತೆ ರಜೆ ಸೌಲಭ್ಯವನ್ನು ವಿಸ್ತರಿಸಬೇಕು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT