ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

10 ಸ್ಥಾಯಿಸಮಿತಿಗಳ ಅಧ್ಯಕ್ಷರ ಆಯ್ಕೆ ಇಂದು

ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಮುಂದೂಡುವಂತೆ ವಿರೋಧ ಪಕ್ಷದ ಮನವಿ
Last Updated 22 ಜನವರಿ 2020, 22:02 IST
ಅಕ್ಷರ ಗಾತ್ರ

ಬೆಂಗಳೂರು:ಬಿಬಿಎಂಪಿ ಸ್ಥಾಯಿ ಸಮಿತಿಗಳ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಗುರುವಾರ ನಡೆಯಲಿದೆ.

ಪಾಲಿಕೆಯ ಕೇಂದ್ರ ಕಚೇರಿಯ ಕೆಂಪೇಗೌಡ ಸಭಾಂಗಣದಲ್ಲಿ ಮೇಯರ್‌ ಎಂ.ಗೌತಮ್‌ ಕುಮಾರ್‌ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಒಟ್ಟು 10 ಸ್ಥಾಯಿ ಸಮಿತಿಗಳ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುತ್ತದೆ.

12 ಸ್ಥಾಯಿ ಸಮಿತಿಗಳಿಗೆ ಒಟ್ಟು 130 ಸದಸ್ಯರನ್ನು ಇದೇ 18ರಂದು ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಗಿತ್ತು. ಪ್ರತಿ ಸಮಿತಿ ಯಲ್ಲೂ ತಲಾ 11 ಸದಸ್ಯರು ಇದ್ದು, ಅವರಲ್ಲಿ ಒಬ್ಬರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗುತ್ತದೆ. ಸಮಿತಿಗಳಲ್ಲಿ ಆಡಳಿತ ಪಕ್ಷದ (ಬಿಜೆಪಿ) 6, ಕಾಂಗ್ರೆಸ್‌ನ 4 ಮತ್ತು ಜೆಡಿಎಸ್‌ನ ಒಬ್ಬರು ಸದಸ್ಯರು ಇದ್ದಾರೆ.

ತೋಟಗಾರಿಕೆ ಮತ್ತು ಲೆಕ್ಕಪತ್ರ ಸ್ಥಾಯಿ ಸಮಿತಿಗಳಿಗೆ ಮಾತ್ರ 10 ಸದಸ್ಯರು ಆಯ್ಕೆಯಾಗಿದ್ದರು. ಹಾಗಾಗಿ, ಈ ಎರಡು ಸ್ಥಾಯಿ ಸಮಿತಿಗಳಿಗೆ ಗುರುವಾರ ಅಧ್ಯಕ್ಷರ ಆಯ್ಕೆ ನಡೆಯುತ್ತಿಲ್ಲ.

ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಮುಂದೂಡಬೇಕು ಎಂದು ಪಾಲಿಕೆಯ ವಿರೋಧ ಪಕ್ಷವಾದ ಕಾಂಗ್ರೆಸ್‌ ಒತ್ತಾಯಿಸಿದೆ.

ಈ ಕುರಿತು ವಿರೋಧ ಪಕ್ಷದ ನಾಯಕ ಅಬ್ದುಲ್‌ ವಾಜಿದ್‌ ಪಾಲಿಕೆ ಆಯುಕ್ತ ಬಿ.ಎಚ್‌.ಅನಿಲ್‌ಕುಮಾರ್‌ ಅವರಿಗೆ ಬುಧವಾರ ಮನವಿ ಸಲ್ಲಿಸಿದ್ದಾರೆ.

‘ಕೆಎಂಸಿ ಕಾಯ್ದೆ ಪ್ರಕಾರ ಪೌರಾಡಳಿತ ಸಂಸ್ಥೆಗಳಿಗೆ ಚುನಾವಣೆ ನಡೆಸುವುದಕ್ಕೆ ಕನಿಷ್ಠ ಏಳು ದಿನಗಳಿಗೆ ಮುಂಚಿತವಾಗಿ ಸದಸ್ಯರಿಗೆ ನೋಟಿಸ್‌ ನೀಡಬೇಕಾಗುತ್ತದೆ. ಆದರೆ, ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಏಳು ದಿನಗಳ ಮುನ್ನ ಸದಸ್ಯರಿಗೆ ನೋಟಿಸ್‌ ನೀಡದೇ ನಿಯಮ ಉಲ್ಲಂಘನೆ ಮಾಡಲಾಗಿದೆ. ಈ ಕ್ರಮವು ಸಹಜ ನ್ಯಾಯ ಪ್ರಕ್ರಿಯೆಗೆ ವಿರುದ್ಧ’ ಎಂದು ಅಬ್ದುಲ್‌ ವಾಜಿದ್‌ ಆಕ್ಷೇಪ
ವ್ಯಕ್ತಪಡಿಸಿದ್ದಾರೆ.

‘ಈ ಹಿಂದೆ ಸಮಿತಿಯಲ್ಲಿ 9 ಮಂದಿ ಸದಸ್ಯರು ಇದ್ದಾಗಲೂ ಅಧ್ಯಕ್ಷರ ಆಯ್ಕೆಯನ್ನು ನಡೆಸಲಾಗಿದೆ. ಹಾಗಾಗಿ ತೋಟಗಾರಿಕೆ ಸ್ಥಾಯಿ ಸಮಿತಿ ಮತ್ತು ಲೆಕ್ಕಪತ್ರ ಸ್ಥಾಯಿ ಸಮಿತಿಗಳ ಅಧ್ಯಕ್ಷರ ಆಯ್ಕೆಯನ್ನು ಬೇರೆ ದಿನ ನಡೆಸುವುದು ಸರಿಯಲ್ಲ. ಎಲ್ಲ 12 ಸಮಿತಿಗಳಿಗೂ ಒಂದೇ ದಿನ ಚುನಾವಣೆ ನಡೆಸಬೇಕು. ಸಮಿತಿಗಳ ಅಧ್ಯಕ್ಷರ ಆಯ್ಕೆಗೆ ನೀಡಿರುವ ನೋಟಿಸ್‌ ಹಿಂಪಡೆಯಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.

ಚುನಾವಣೆ ಮುಂದೂಡುವ ಕುರಿತು ಪ್ರತಿಕ್ರಿಯಿಸಿದ ಪಾಲಿಕೆಯ ಅಧಿಕಾರಿಯೊಬ್ಬರು, ‘ಮೇಯರ್‌ ಎಂ.ಗೌತಮ್‌ ಕುಮಾರ್‌ ಸೂಚನೆ ಮೇರೆಗೆ 10 ಸಮಿತಿಗಳ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ನಿಗದಿಪಡಿಸಿದ್ದೇವೆ. ಎರಡು ಸಮಿತಿಗಳಲ್ಲಿ ಖಾಲಿ ಇರುವ ತಲಾ ಒಬ್ಬರು ಸದಸ್ಯರ ಸ್ಥಾನವನ್ನು ಭರ್ತಿ ಮಾಡಲು ಚುನಾವಣೆ ನಡೆಸುವಂತೆ ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆದಿದ್ದೇವೆ’ ಎಂದರು.

ಗೌಡಯ್ಯಗೆ ಮುಖ್ಯ ಎಂಜಿನಿಯರ್‌ ಹುದ್ದೆ–ವಿರೋಧ
ಎನ್‌.ಜಿ.ಗೌಡಯ್ಯ ಅವರನ್ನು ಪಾಲಿಕೆಯ ಯೋಜನಾ ವಿಭಾಗದ ಮುಖ್ಯ ಎಂಜಿನಿಯರ್‌ ಹುದ್ದೆಗೆ ನೇಮಕ ಮಾಡಿ ಸರ್ಕಾರ ಆದೇಶ ಮಾಡಿರುವುದಕ್ಕೆ ಪಾಲಿಕೆಯ ವಿರೋಧ ಪಕ್ಷ ಆಕ್ಷೇಪ ವ್ಯಕ್ತಪಡಿಸಿದೆ.

‘ಆದಾಯ ಮೀರಿದ ಸಂಪತ್ತು ಗಳಿಸಿದ ಆರೋಪ ಎದುರಿಸಿದ್ದ ಗೌಡಯ್ಯ ಅವರನ್ನು ಅಮಾನತುಗೊಳಿಸಲಾಗಿತ್ತು. ಇಲಾಖಾ ವಿಚಾರಣೆ ಬಾಕಿ ಇರುವಾಗಲೇ ಅವರಿಗೆ ಸೂಪರಿಟೆಂಡಿಂಗ್‌ ಎಂಜಿನಿಯರ್‌ ಹುದ್ದೆಯಿಂದ ಮುಖ್ಯ ಎಂಜಿನಿಯರರ್‌ ಹುದ್ದೆಗೆ ಬಡ್ತಿ ನೀಡಿ ಬಿಬಿಎಂಪಿ ಯೋಜನಾ ವಿಭಾಗದ ಉಸ್ತುವಾರಿ ನೀಡಿರುವುದು ಕಾನೂನುಬಾಹಿರ. ಇದರಿಂದ ಕೆಟ್ಟ ಸಂದೇಶ ರವಾನೆಯಾಗುತ್ತದೆ. ಹಾಗಾಗಿ ಸರ್ಕಾರ ಈ ಆದೇಶವನ್ನು ಹಿಂಪಡೆಯಬೇಕು’ ಎಂದು ಅಬ್ದುಲ್‌ ವಾಜಿದ್‌ ಒತ್ತಾಯಿಸಿದ್ದಾರೆ.

*
7 ದಿನ ಮುಂಚಿತವಾಗಿ ನೋಟಿಸ್ ನೀಡದೇ ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ ನಡೆಸುವುದು ಕಾನೂನುಬಾಹಿರ. ಚುನಾವಣೆ ನಡೆ ದಲ್ಲಿ ಕೋರ್ಟ್ ಮೊರೆ ಹೋಗುತ್ತೇವೆ
ಅಬ್ದುಲ್‌ ವಾಜಿದ್‌,ವಿರೋಧ ಪಕ್ಷದ ನಾಯಕ

*
ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆಗೆ 7 ದಿನ ಮನ್ನ ನೋಟಿಸ್ ನೀಡುವ ನಿಯಮವೇನಿಲ್ಲ. ಆಯ್ಕೆ ಪ್ರಕ್ರಿಯೆ ಮುಂದೂಡುವುದು ಮೇಯರ್‌ ವಿವೇಚನೆಗೆ ಬಿಟ್ಟಿದ್ದು
-ಬಿ.ಎಚ್‌.ಅನಿಲ್‌ ಕುಮಾರ್‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT