ಬೆಂಗಳೂರು: ‘ಪಾಲಿಕೆಯ ಎಲ್ಲ ವಾರ್ಡ್ಗಳಲ್ಲಿಯೂ ವಾರ್ಡ್ ಸಮಿತಿ ಸಭೆಯನ್ನು ಪ್ರತಿ ತಿಂಗಳೂ ಕಡ್ಡಾಯವಾಗಿ ನಡೆಸಬೇಕು. ಈ ಸಭೆಯು ಇನ್ನೂ ಹೆಚ್ಚು ಪರಿಣಾಮಕಾರಿಯಾಗಬೇಕು’ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ ನೀಡಿದ್ದಾರೆ.
ಈ ಸೂಚನೆಯನ್ನು ಉಲ್ಲಂಘಿಸುವ ನೋಡಲ್ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದೂ ಅವರು ಎಚ್ಚರಿಕೆ ನೀಡಿದ್ದಾರೆ.
ಬಿಬಿಎಂಪಿ ಸದಸ್ಯರ ಅಧಿಕಾರಾವಧಿಯು 2020ರ ಸೆ.10ರಂದು ಮುಕ್ತಾಯಗೊಂಡಿದ್ದು, ತದನಂತರ ಎಲ್ಲಾ 198 ವಾರ್ಡ್ಗಳ ವಾರ್ಡ್ ಸಮಿತಿಗಳಿಗೂ ಪಾಲಿಕೆಯ ಹಿರಿಯ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ.
ಕೆಲವು ವಾರ್ಡ್ಗಳಲ್ಲಿ ವಾರ್ಡ್ ಸಮಿತಿ ಸಭೆಗಳು ವ್ಯವಸ್ಥಿತವಾಗಿ ನಡೆಯುತ್ತಿಲ್ಲ. ಕೆಲವು ನೋಡಲ್ ಅಧಿಕಾರಿಗಳು ಕಾಟಾಚಾರಕ್ಕೆ ಸಭೆ ನಡೆಸುತ್ತಾರೆ. ಸ್ಥಳೀಯರ ಸಮಸ್ಯೆಗಳಿಗೆ ಈ ಸಭೆಗಳಲ್ಲಿ ಸ್ಪಂದನೆ ಸಿಗುತ್ತಿಲ್ಲ ಎಂಬ ದೂರುಗಳಿವೆ.