ಬೆಂಗಳೂರು: ನಾಡಪ್ರಭು ಕೆಂಪೇಗೌಡ ಬಡಾವಣೆ ಕಾಮಗಾರಿ ವಿಳಂಬ ಮಾಡುತ್ತಿರುವ ಗುತ್ತಿಗೆದಾರರು ಮತ್ತು ಎಂಜಿನಿಯರ್ಗಳನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ(ಬಿಡಿಎ) ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ತರಾಟೆಗೆ ತೆಗೆದುಕೊಂಡರು.
ಬಡಾವಣೆಯಲ್ಲಿ ನಿರ್ಮಾಣ ಆಗುತ್ತಿರುವ ರಸ್ತೆ ಸೇರಿ ಮೂಲಸೌಕರ್ಯ ಕಾಮಗಾರಿಗಳನ್ನು ಬಿಡಿಎ ಅಧಿಕಾರಿಗಳ ಜತೆ ಪರಿಶೀಲನೆ ನಡೆಸಿದ ಅವರು, ‘ತ್ವರಿತವಾಗಿ ಕಾಮಗಾರಿ ಕೈಗೆತ್ತಿಕೊಳ್ಳುವಲ್ಲಿ ಗುತ್ತಿಗೆದಾರರು ವಿಫಲರಾಗಿದ್ದಾರೆ. ಎಂಜಿನಿಯರ್ಗಳು ಜವಾಬ್ದಾರಿ ತೆಗೆದುಕೊಂಡು ಕೆಲಸ ಮಾಡಿಸಬೇಕು’ ಎಂದು ಎಚ್ಚರಿಸಿದರು.
‘ಸ್ಥಗಿತಗೊಂಡಿರುವ ಕಾಮಗಾರಿ ಯನ್ನು 15 ದಿನಗಳಲ್ಲಿ ಆರಂಭಿಸಬೇಕು. ಎರಡು ವಾರಗಳ ನಂತರ ಮತ್ತೊಮ್ಮೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುವುದು. ಲೋಪಗಳು ಕಂಡುಬಂದರೆ ಶಿಸ್ತುಕ್ರಮಕ್ಕೆ ಸ್ಥಳದಲ್ಲೇ ಶಿಫಾರಸು ಮಾಡಲಾಗುವುದು’ ಎಂದು ಹೇಳಿದರು.
ಇದೇ ವೇಳೆ, ಬಡಾವಣೆ ನಿರ್ಮಾಣಕ್ಕೆ ಭೂಮಿ ನೀಡಿರುವ ರೈತರೊಂದಿಗೆ ವಿಶ್ವನಾಥ್ ಸಭೆ ನಡೆಸಿದರು. ರೈತರಿಗೆ ನೀಡಬೇಕಿರುವ ನಿವೇಶನ ಮತ್ತು ಪರಿಹಾರವನ್ನು ಕೂಡಲೇ ಬಿಡುಗಡೆ ಮಾಡುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.