ಬೆಳಗಾವಿ: ಬೆಂಗಳೂರು ಮೆಟ್ರೊ ರೈಲು ನಿಗಮದಲ್ಲಿ ಬಡ್ತಿ ನೀಡುವಲ್ಲಿ ತಾರತಮ್ಯ ಮಾಡಲಾಗುತ್ತದೆ ಎಂಬ ದೂರಿನ ಬಗ್ಗೆ ಪರಿಶೀಲಿಸಲಾಗುವುದು. ತಪ್ಪು ಕಂಡು ಬಂದರೆ ಕ್ರಮಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.
ಶುಕ್ರವಾರ ವಿಧಾನ ಪರಿಷತ್ನಲ್ಲಿ ಚೌಡರೆಡ್ಡಿ ತೂಪಲ್ಲಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ತಾಂತ್ರಿಕ ಹುದ್ದೆಗಳಿಗೆ ಪರೀಕ್ಷೆ ಮಾಡಿ ಬಡ್ತಿ ನೀಡಿದರೆ ತಪ್ಪೇನಿಲ್ಲ ಎಂದರು.
ಜ್ಯೇಷ್ಠತೆ ಆಧಾರದ ಮೇಲೆ ಬಡ್ತಿ ನೀಡಬೇಕು. ಗುತ್ತಿಗೆ ಆಧಾರದ ಹಿರಿತನ ಹೊಂದಿದವರಿಗೆ ಬಡ್ತಿ ನೀಡಲಾಗುತ್ತದೆ. ಆದರೆ ಕಾಯಂ ನೌಕರರಿಗೆ ನೀಡುತ್ತಿಲ್ಲ. ಯಾಕೆ ತಾರತಮ್ಯ ಮಾಡಲಾಗುತ್ತಿದೆ ಎಂದು ಚೌಡರೆಡ್ಡಿ ಪ್ರಶ್ನಿಸಿದರು.
ಜ್ಯೇಷ್ಠತೆ ಹಾಗೂ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಬಡ್ತಿ ನೀಡಲಾಗುತ್ತದೆ. ತಾರತಮ್ಯವಾಗಿದ್ದರೆ ಪರಿಶೀಲಿಸಲಾಗುವುದು ಎಂದು ಪರಮೇಶ್ವರ ಹೇಳಿದರು.
ನಿತ್ಯ 4 ಲಕ್ಷ ಮಂದಿ ಪ್ರಯಾಣಿಸುತ್ತಿದ್ದಾರೆ. ಸಮಯ ವಿಸ್ತರಣೆ ಬಗ್ಗೆ ಪರಿಶೀಲಿಸಲಾಗುವುದು ಎಂದರು.