ಬೇಲೂರು: ‘ಪ್ರಧಾನಿ ನರೇಂದ್ರ ಮೋದಿ ಚುನಾವಣೆ ಪ್ರಚಾರದ ಭಾಷಣದಲ್ಲಿ ಗೌರವಯುತ ಮಾತು ಆಡಿದ ಮಾತ್ರಕ್ಕೆ ಬಿಜೆಪಿ-ಜೆಡಿಎಸ್ ಮೈತ್ರಿ ಎಂದು ಪ್ರಚಾರ ನಡೆಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ನಾಚಿಕೆಯಾಗಬೇಕು’ ಎಂದು ಜೆಡಿಎಸ್ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ವಾಗ್ದಾಳಿ ನಡೆಸಿದರು.
ತಾಲ್ಲೂಕಿನ ಗಬ್ಬಲಗೊಡು ಗ್ರಾಮದಲ್ಲಿ ನಡೆದ ಜೆಡಿಎಸ್ ಚುನಾವಣೆ ಪ್ರಚಾರ ಸಭೆಯಲ್ಲಿ ಭಾಗವಹಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
‘ಕಾಂಗ್ರೆಸ್ ಪಕ್ಷ ಸೋಲಿನ ಭೀತಿಯಿಂದಲೇ ಜೆಡಿಎಸ್ ಸಂಘ ಪರಿವಾರ ಎಂದು ಹೇಳುವ ಮೂಲಕ ಮುಸ್ಲಿಂ ಮತಗಳನ್ನು ತಪ್ಪಿಸಲು ಹುನ್ನಾರ ನಡೆಸುತ್ತಿದೆ. ಕಾಂಗ್ರೆಸ್ ಬಗ್ಗೆ ರಾಜ್ಯದ ಜನರಿಗೆ ಗೊತ್ತಿದೆ. ರಾಷ್ಟ್ರೀಯ ಪಕ್ಷಗಳ ಆಟ ಮೊಟಕುಗೊಳಿಸಿ ನಾಡು –ನುಡಿ –ಜಲ ಸಂರಕ್ಷಣೆಗಾಗಿ ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ತರುತ್ತಾರೆ’ ಎಂದು ಆಶಿಸಿದರು.
‘ಜೆಡಿಎಸ್ ಬಿಎಸ್ಪಿ ಮೈತ್ರಿ ಸರ್ಕಾರವೇ ಅಧಿಕಾರಕ್ಕೆ ಬರಲಿದೆ. ಇದನ್ನು ತಪ್ಪಿಸಲು ಸಾದ್ಯವಿಲ್ಲ. ವಾಮಮಾರ್ಗದ ರಾಜಕೀಯಕ್ಕೆ ರಾಜ್ಯದ ಜನತೆ ತಕ್ಕ ಉತ್ತರ ನೀಡುತ್ತಾರೆ’ ಎಂದರು.
ಜಿಲ್ಲೆ ಜೆಡಿಎಸ್ ಭದ್ರಕೋಟೆ. ಇದನ್ನು ಛಿದ್ರ ಮಾಡುವ ವಿಪಕ್ಷಗಳ ಕನಸು ಸಾಧ್ಯವಾಗದು. ಜಿಲ್ಲೆಯಲ್ಲಿ 7 ಕ್ಷೇತ್ರಗಳಲ್ಲೂ ಜೆಡಿಎಸ್ ಗೆಲ್ಲಲಿದೆ. ಕ್ಷೇತ್ರದಲ್ಲಿ ಜೆಡಿಎಸ್ ಪರ ಅಲೆ ಇದ್ದು, ಲಿಂಗೇಶ್ ಜಯ ಶತಸಿದ್ಧ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಅಭ್ಯರ್ಥಿ ಕೆ.ಎಸ್.ಲಿಂಗೇಶ್, ತಾಲ್ಲೂಕು ಅಧ್ಯಕ್ಷ ತೊ.ಚ.ಅನಂತಸುಬ್ಬರಾಯ, ಎಚ್ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಂ.ಎ.ನಾಗರಾಜು, ಸಹಕಾರಿ ಒಕ್ಕೂಟದ ಅಧ್ಯಕ್ಷ ಬಿ.ಡಿ.ಚಂದ್ರೇಗೌಡ, ಸಿ.ಎಚ್.ಮಹೇಶ್, ಬಾಣಸವಳ್ಳಿ ಆಶ್ವಥ್, ಎಚ್.ಎಂ.ದಯಾನಂದ್, ಬಿಎಸ್ಪಿ ರಾಜ್ಯ ಕಾರ್ಯದರ್ಶಿ ಗಂಗಾಧರ್ ಬಹುಜನ ಇದ್ದರು.