ಬೆಂಗಳೂರು: ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಹಾಗೂ ಕಾವಲ್ ಭೈರಸಂದ್ರದಲ್ಲಿ ನಡೆದಿದ್ದ ಗಲಭೆ ಸಂಬಂಧ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು, ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಕಚೇರಿಗಳ ಮೇಲೆ ದಾಳಿ ಮಾಡಿದ್ದಾರೆ.
ಗಲಭೆಯಲ್ಲಿ ಭಾಗಿಯಾಗಿದ್ದ ಹಾಗೂ ಪ್ರಚೋದನೆ ನೀಡಿದ್ದ ಆರೋಪದಡಿ ಎಸ್ಡಿಪಿಐ ಪಕ್ಷದ ಹಲವರನ್ನು ಈ ಹಿಂದೆ ಪೊಲೀಸರು ಬಂಧಿಸಿದ್ದರು. ಅವರು ನೀಡಿದ ಮಾಹಿತಿ ಮೇರೆಗೆ ಪಕ್ಷದ ಕಚೇರಿ ಮೇಲೆ ಈ ದಾಳಿ ನಡೆಸಲಾಗಿದೆ.
'ನ್ಯಾಯಾಲಯದ ಅನುಮತಿ ಪಡೆದು ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಹಾಗೂ ಹಲಸೂರ್ ಗೇಟ್ ಬಳಿ ಇರುವ ಎಸ್ಡಿಪಿಐ ಕಚೇರಿಗಳ ಮೇಲೆ ದಾಳಿ ಮಾಡಲಾಗಿದೆ' ಎಂದು ಸಿಸಿಬಿಯ ಜಂಟಿ ಕಮಿಷನರ್ ಸಂದೀಪ್ ಪಾಟೀಲ ತಿಳಿಸಿದರು.
'ಹಿರಿಯ ಅಧಿಕಾರಿಗಳ ನೇತೃತ್ವದ 3 ವಿಶೇಷ ತಂಡಗಳು ಈ ದಾಳಿ ಮಾಡಿವೆ' ಎಂದೂ ಹೇಳಿದರು.