ಬೆಂಗಳೂರು: ‘ಸೇವಾ ಹಿರಿತನ ಆಧಾರದಲ್ಲಿ ಗೌರವಧನ ಹೆಚ್ಚಳ ಮಾಡಬೇಕು’ ಎಂದು ಆಗ್ರಹಿಸಿ ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ನಗರದಲ್ಲಿ ಇಂದು (ಮಾ. 2) ‘ಬೆಂಗಳೂರು ಚಲೊ’ ಪ್ರತಿಭಟನಾ ರ್ಯಾಲಿ ನಡೆಸಲಿದ್ದಾರೆ.
‘ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಫೆಡರೇಷನ್ (ಎಐಟಿಯುಸಿ) ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 11ಕ್ಕೆ ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಮೆರವಣಿಗೆ ನಡೆಸಲಾಗುವುದು. ನಂತರ ಉದ್ಯಾನದಲ್ಲಿ ಬಹಿರಂಗ ಸಭೆ ಆಯೋಜಿಸಲಾಗಿದೆ’ ಎಂದು ಎಐಟಿಯುಸಿ ಪದಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
‘ಪಿಂಚಣಿ ನೀಡಬೇಕು, ಉಚಿತ ವೈದ್ಯಕೀಯ ಸೌಲಭ್ಯ ಹಾಗೂ ಇಎಸ್ಐ ಜಾರಿ ಮಾಡಬೇಕು ಎಂಬುದು ಸೇರಿ ಹಲವು ಬೇಡಿಕೆಗಳ ಈಡೇರಿಕೆಗಾಗಿ ಈ ಹೋರಾಟ ನಡೆಸಲಾಗುತ್ತಿದೆ. ಪ್ರತಿಭಟನೆ ಬಳಿಕ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಮನವಿ ಸಲ್ಲಿಸಲಾಗುವುದು’ ಎಂದೂ ಹೇಳಿದ್ದಾರೆ.