ಕೆ.ಆರ್.ಪುರ: ಕ್ಷೇತ್ರ ವ್ಯಾಪ್ತಿಯಲ್ಲಿರುವ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಕುಮಾರ್ ಶೆಟ್ಟಿ ಬಣದ ಕಾರ್ಯಕರ್ತರು ಕೆ.ಆರ್ ಪುರದ ಬಿಬಿಎಂಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಬಸವನಪುರ, ದೇವಸಂದ್ರ, ರಾಮಮೂರ್ತಿನಗರ, ಭಟ್ಟರಹಳ್ಳಿ ಸೇರಿದಂತೆ ಪ್ರಮುಖ ಮುಖ್ಯರಸ್ತೆಯಲ್ಲಿ ಗುಂಡಿಗಳು ಬಿದ್ದು ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿದೆ. ಸಾವಿರಾರು ವಾಹನ ಸಂಚರಿಸುವ ಮುಖ್ಯರಸ್ತೆಗಳಲ್ಲಿ ನೂರಾರು ಗುಂಡಿಗಳಾಗಿವೆ. ವಾಹನ ಸವಾರರು ಗುಂಡಿ ತಪ್ಪಿಸುವ ಭರದಲ್ಲಿ ಅಪಘಾತಗಳು ಸಂಭವಿಸುತ್ತಿವೆ ಪ್ರತಿಭಟನಾಕಾರರು ದೂರಿದರು.
ರಸ್ತೆ ಗುಂಡಿಗಳಿಂದಾಗಿ ಅನೇಕರು ಆಸ್ಪತ್ರೆ ಸೇರುತ್ತಿದ್ದಾರೆ. ಅಲ್ಲದೆ ವಿಪರೀತ ಸಂಚಾರ ದಟ್ಟಣೆ ಉಂಟಾಗುತ್ತಿದೆ. ನಗರದಲ್ಲಿ ಗುಂಡಿ ಮುಚ್ಚಲು ಸರ್ಕಾರ ಅನುದಾನ ಒದಗಿಸಿದೆ. ಆದರೆ ಬಿಬಿಎಂಪಿ ಅಧಿಕಾರಿಗಳು ಗುಂಡಿ ಮುಚ್ಚುವ ಕೆಲಸ ಮಾಡದೇ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ದೂರಿದರು.
‘ಪ್ರಮುಖ ರಸ್ತೆಗಳಲ್ಲಾಗಿರುವ ಗುಂಡಿಗಳಿಂದ ಜನಸಾಮಾನ್ಯರಿಗೆ ತುಂಬಾ ತೊಂದರೆ ಆಗುತ್ತಿದೆ. ಕೂಡಲೇ ಬಿಬಿಎಂಪಿ ಅಧಿಕಾರಿಗಳು ಹದಗೆಟ್ಟಿರುವ ರಸ್ತೆಗಳನ್ನು ದುರಸ್ತಿಗೊಳಿಸಬೇಕು‘ ಎಂದು ಕೆ.ಆರ್.ಪುರ ಕ್ಷೇತ್ರ ಕರವೇ ಅಧ್ಯಕ್ಷ ಕೃಷ್ಣಮೂರ್ತಿ ಆಗ್ರಹಿಸಿದರು.