ಕಲಬುರ್ಗಿ: ‘ಹಿಂದುಳಿದ ವರ್ಗಗಳ (ಒಬಿಸಿ) ರಾಷ್ಟ್ರೀಯ ಆಯೋಗಕ್ಕೆ ಸಾಂವಿಧಾನಿಕ ಸ್ಥಾನಮಾನ ನೀಡುವ ಮಸೂದೆಗೆ ಲೋಕಸಭೆ ಅಂಗೀಕಾರ ನೀಡಿದ್ದು, ರಾಜ್ಯಸಭೆಯಲ್ಲಿ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸುತ್ತಿದೆ’ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಆರೋಪಿಸಿದರು.
ನಗರದಲ್ಲಿ ಸೋಮವಾರ ಆಯೋಜಿಸಿದ್ದ ಹಿಂದುಳಿದ ವರ್ಗಗಳ ಪ್ರಮುಖರೊಂದಿಗಿನ ಸಂವಾದದಲ್ಲಿ ಅವರು ಮಾತನಾಡಿದರು.
‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಲ್ಪಸಂಖ್ಯಾತರು ಮಾತ್ರ ಕಾಣಿಸುತ್ತಿದ್ದಾರೆ. ಆದರೆ ಹಿಂದುಳಿದ ವರ್ಗದವರು ಕಾಣಿಸುತ್ತಿಲ್ಲ. ಹಿಂದುಳಿದ ವರ್ಗಗಳ ಬಗ್ಗೆ ರಾಹುಲ್ ಗಾಂಧಿ ಹಾಗೂ ಸಿದ್ದರಾಮಯ್ಯ ಅವರಿಗೆ ನಿಜವಾಗಿಯೂ ಕಾಳಜಿ ಇದ್ದರೆ ಮಸೂದೆ ಅಂಗೀಕಾರಕ್ಕೆ ಸಹಕಾರ ನೀಡಲಿ’ ಎಂದರು.
‘ಹೈದರಾಬಾದ್ ಕರ್ನಾಟಕ ಮತ್ತು ಮುಂಬೈ ಕರ್ನಾಟಕದ ಉದ್ಯಮಿಗಳಿಗೆ ಅನುಕೂಲವಾಗುವಂತೆ ಕೈಗಾರಿಕಾ ಕಾರಿಡಾರ್ ನಿರ್ಮಿಸಲಾಗುವುದು. ಇದರಿಂದ ಈ ಭಾಗ ಅಭಿವೃದ್ಧಿ ಹೊಂದಲು ಸಾಧ್ಯವಾಗಲಿದೆ’ ಎಂದು ಹೇಳಿದರು.