ಬೆಂಗಳೂರು: ಬಹುಮಹಡಿ ಕಟ್ಟಡವೊಂದಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಲು ₹ 1 ಲಕ್ಷ ಲಂಚ ಪಡೆದ ಬೆಸ್ಕಾಂ ಉತ್ತರ–2 ವಿಜಯನಗರ ಉಪ ವಿಭಾಗದ ಕಿರಿಯ ಎಂಜಿನಿಯರ್ ಪ್ರಕಾಶ್ ಅವರನ್ನು ಲೋಕಾಯುಕ್ತ ಪೊಲೀಸರು ಬುಧವಾರ ಸಂಜೆ ಬಂಧಿಸಿದ್ದಾರೆ.
ವಿಜಯನಗರದಲ್ಲಿರುವ ರತ್ನಾ ಆ್ಯಂಡ್ ಉಮರಾಣಿ ಎಂಬ ಬಹುಮಹಡಿ ಕಟ್ಟಡಕ್ಕೆ ನೀಡಿದ್ದ ವಿದ್ಯುತ್ ಪೂರೈಕೆಯ ಸಂಪರ್ಕವನ್ನು ಪುನಃ ಚಾಲನೆಗೊಳಿಸಬೇಕಿತ್ತು. ಇದಕ್ಕಾಗಿ ವಿದ್ಯುತ್ ಕಾಮಗಾರಿಗಳ ಗುತ್ತಿಗೆದಾರ ಮಂಜೇಶ್ ಎಂಬುವವರು ಅರ್ಜಿ ಸಲ್ಲಿಸಿದ್ದರು.
ವಿದ್ಯುತ್ ಸಂಪರ್ಕಕ್ಕೆ ಅನುಮತಿ ನೀಡಲು ₹ 2.50 ಲಕ್ಷ ಲಂಚ ನೀಡುವಂತೆ ಪ್ರಕಾಶ್ ಬೇಡಿಕೆ ಇಟ್ಟಿದ್ದರು. ಅರ್ಜಿದಾರರು ಚೌಕಾಸಿ ನಡೆಸಿದಾಗ ₹ 1 ಲಕ್ಷ ಕೊಟ್ಟರೆ ಒಪ್ಪಿಗೆ ನೀಡುವುದಾಗಿ ಹೇಳಿದ್ದರು. ಈ ಕುರಿತು ಅರ್ಜಿದಾರರು ಲೋಕಾಯುಕ್ತದ ಬೆಂಗಳೂರು ನಗರ ಪೊಲೀಸ್ ಘಟಕಕ್ಕೆ ದೂರು ನೀಡಿದ್ದರು.