ಬೆಂಗಳೂರು: ಯಲಹಂಕ ಸಂಚಾರ ಠಾಣೆಯ ವ್ಯಾಪ್ತಿಯಲ್ಲಿ ಕಾರು ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿದ್ದು, ಯುವತಿಯೊಬ್ಬರ ಕಾಲು ತುಂಡರಿಸಿದೆ.
‘ಬೆಂಗಳೂರು ಕೃಷಿ ವಿಶ್ವವಿದ್ಯಾಲಯ (ಜಿಕೆವಿಕೆ) ಸಿಗ್ನಲ್ನಲ್ಲಿ ಗುರುವಾರ ಅಪಘಾತ ಸಂಭವಿಸಿದೆ. ದ್ವಿಚಕ್ರ ವಾಹನದಲ್ಲಿದ್ದ ಯುವತಿಯ ಕಾಲು ತುಂಡರಿಸಿ ರಸ್ತೆಯಲ್ಲಿ ಬಿದ್ದಿತ್ತು. ನರಳಾಡುತ್ತಿದ್ದ ಯುವತಿಯನ್ನು ಕಾಲು ಸಮೇತವಾಗಿ ಸಮೀಪದ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.
‘ದ್ವಿಚಕ್ರ ವಾಹನ ಯೂಟರ್ನ್ ತೆಗೆದುಕೊಳ್ಳುವ ವೇಳೆಯಲ್ಲೇ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದಿತ್ತು. ದ್ವಿಚಕ್ರ ವಾಹನದ ಹಿಂಬದಿಯಲ್ಲಿ ಕುಳಿತಿದ್ದ ಯುವತಿ, ರಸ್ತೆಗೆ ಬಿದ್ದಿದ್ದರು. ಕಾಲಿಗೆ ತೀವ್ರ ಪೆಟ್ಟು ಬಿದ್ದಿದ್ದರಿಂದ, ಅದು ತುಂಡಾಗಿದೆ. ಯುವತಿಗೆ ಚಿಕಿತ್ಸೆ ಮುಂದುವರಿದಿದೆ’ ಎಂದೂ ತಿಳಿಸಿವೆ.