ಬೆಂಗಳೂರು: ಸಾರ್ವಜನಿಕ ಸ್ಥಳ ಹಾಗೂ ಮನೆಗಳ ಮುಂದೆ ನಿಲ್ಲಿಸುತ್ತಿದ್ದ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಆರೋಪದಡಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
‘ಕೀರ್ತಿ, ಸಂಜಯ್ ಹಾಗೂ ದರ್ಶನ್ ಬಂಧಿತರು. ಇವರಿಂದ ₹ 4 ಲಕ್ಷ ಮೌಲ್ಯದ 10 ವಾಹನ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.
‘ಮೂವರೂ ಆರೋಪಿಗಳು ಸ್ನೇಹಿತರು. ದುಶ್ಚಟಗಳಿಗೆ ಹಣ ಹೊಂದಿಸಲು ಕಳ್ಳತನಕ್ಕೆ ಇಳಿದಿದ್ದರು. ನಗರದಲ್ಲಿ ಸಂಚರಿಸುತ್ತಿದ್ದ ಇವರು, ಲಾಕ್ ಮುರಿದು ದ್ವಿಚಕ್ರ ವಾಹನ ಕದಿಯುತ್ತಿದ್ದರು. ಅವುಗಳನ್ನು ಮಾರಾಟ ಮಾಡಿ, ಬಂದ ಹಣವನ್ನು ಹಂಚಿಕೊಳ್ಳುತ್ತಿದ್ದರು’ ಎಂದು ತಿಳಿಸಿದರು.
‘ಕೆಂಗೇರಿ, ರಾಜಗೋಪಾಲನಗರ ಸೇರಿ ವಿವಿಧ ಠಾಣೆಗಳ ವ್ಯಾಪ್ತಿಯಲ್ಲೂ ಆರೋಪಿಗಳು ಕೃತ್ಯ ಎಸಗಿದ್ದ ಸಂಗತಿ ತನಿಖೆಯಿಂದ ಗೊತ್ತಾಗಿದೆ’ ಎಂದೂ ಹೇಳಿದರು.