ರಾಜರಾಜೇಶ್ವರಿನಗರ: ಕಾಂಗ್ರೆಸ್ ಬಡತನ ನಿರ್ಮೂಲನೆಗೆ ಪ್ರಯತ್ನಿಸಿದರೆ ಬಿಜೆಪಿ ಬಡತನ ಸೃಷ್ಟಿ ಮಾಡಲು ಹೊರಟಿದೆ ಎಂದು ಬೆಂಗಳೂರು ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ರಾಜ್ಕುಮಾರ್ ಆರೋಪಿಸಿದರು.
ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್, ಯಶವಂತಪುರ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಸಮಿತಿಯ ಉಲ್ಲಾಳ ಸಮೀಪದ ಸೊಣ್ಣೇನಹಳ್ಳಿಯ ಕನಕಶ್ರೀ ಭವನದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದರು.
‘ಅಭಿವೃದ್ಧಿ ಕೆಲಸಗಳ ಕಡೆ ಗಮನ ಹರಿಸದೆ ಹಿಂದೂ ರಾಷ್ಟ್ರ, ರಾಮ, ಆಂಜನೇಯ, ಗಣೇಶನ ಹೆಸರೇಳಿ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಕಾಂಗ್ರೆಸ್ ಟೀಕಿಸುವ ನೈತಿಕತೆ ಬಿಜೆಪಿಗಿಲ್ಲ’ ಎಂದರು.
ಮುಖಂಡ ಪಿ.ನಾಗರಾಜು ಮಾತನಾಡಿ, ‘ಕೊರೊನಾ ಹೆಸರಿನಲ್ಲಿ ಸಾವಿರಾರು ಕೋಟಿ ಲೂಟಿ ಹೊಡೆಯುತ್ತಿರುವ ಬಿಜೆಪಿ ನಾಯಕರು, ಸಚಿವರ ವಿರುದ್ಧ ಸರ್ಕಾರ ಏಕೆ ಕ್ರಮಕೈಗೊಂಡಿಲ್ಲ. ಬಿಜೆಪಿ ಭ್ರಷ್ಟಾಚಾರದ ವಿರುದ್ಧ ಮಾತನಾಡಿದರೆ ಸಿಬಿಐ, ಸಿಐಡಿ ಮೂಲಕ ಸುಳ್ಳು ಪ್ರಕರಣ ದಾಖಲಿಸಿ ಹೆದರಿಸುತ್ತಿದ್ದಾರೆ’ ಎಂದು ಅವರು ದೂರಿದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಡಾ.ಸುರೇಂದ್ರ ಮಾತನಾಡಿ, ‘ನಿಷ್ಟಾವಂತರಿಂದ ಪಕ್ಷ ಉಳಿದಿದೆ. ಮುಂದಿನ ದಿನಗಳಲ್ಲಿ ನಿರಂತರವಾಗಿ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು’ ಎಂದು ಕಾರ್ಯಕರ್ತರಿಗೆ ತಿಳಿಸಿದರು.