ಬೆಂಗಳೂರು: ‘ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಅನನ್ಯ. ದೇಶದ ಪ್ರಥಮ ಪ್ರಜೆ ಮಹಿಳೆಯಾಗಿರುವುದು ಭಾರತದ ಘನತೆಯನ್ನು ಇನ್ನಷ್ಟು ಹೆಚ್ಚಿಸಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಮಹದೇವಪುರದ ಕುಂದಲಹಳ್ಳಿ ಗೇಟ್ ಸಿಗ್ನಲ್ ಮೈದಾನದಲ್ಲಿ ಭಾನುವಾರ ನಡೆದ ಬಿಜೆಪಿ ಮಹಿಳಾ ಮೋರ್ಚಾ ಬೆಂಗಳೂರು ಕೇಂದ್ರ ಜಿಲ್ಲಾ ಸಮಾವೇಶದಲ್ಲಿ ಅವರು ಮಾತನಾಡಿದರು.
‘ಮಹಿಳೆಯರು ಸಾಧಿಸಿದ ಪ್ರಗತಿಯ ಆಧಾರದಲ್ಲಿ ಸಮುದಾಯದ ಪ್ರಗತಿ ಅಳೆಯಬೇಕಾಗುತ್ತದೆ ಎಂದು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಹೇಳಿದ್ದರು. ಪ್ರಧಾನಿ ಮೋದಿ ಅವರೂ ಮಹಿಳೆಯರ ಅಭಿವೃದ್ಧಿಗಾಗಿ ಸಾಕಷ್ಟು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದಾರೆ. ದೇಶಕ್ಕೆ ಹಲವು ಬಜೆಟ್ ಕೊಟ್ಟ ನಿರ್ಮಲಾ ಸೀತಾರಾಮನ್ ಸಹ ಮಹಿಳೆ ಎನ್ನುವುದು ಹೆಮ್ಮೆಯ ಸಂಗತಿ’ ಎಂದರು.
ಸಂಸದ ಪಿ.ಸಿ. ಮೋಹನ್, ‘2004ರಿಂದ 2014ವರೆಗೆ ಒಂದು ದಶಕ ಆಡಳಿತ ನಡೆಸಿದ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಭ್ರಷ್ಟಾಚಾರದ ಸುಳಿಗೆ ಸಿಲುಕಿತ್ತು. ದೇಶಕ್ಕೆ ಭ್ರಷ್ಟಾಚಾರದ ಕೂಸು ನೀಡಿದ ಕೀರ್ತಿ ಕಾಂಗ್ರೆಸ್ಗೆ ಸಲ್ಲುತ್ತದೆ. ಎನ್ಡಿಎ ಅಧಿಕಾರಕ್ಕೆ ಬಂದ ನಂತರ ಭಾರತ ವಿಶ್ವದಲ್ಲೇ ಐದನೇ ದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ. ಇದಕ್ಕೆ ಪ್ರಮುಖ ಕಾರಣ ದೇಶದ ಮಹಿಳೆಯರು’ ಎಂದರು.
ಶಾಸಕರಾದ ಅರವಿಂದ ಲಿಂಬಾವಳಿ, ಪೂರ್ಣಿಮಾ ಶ್ರೀನಿವಾಸ್, ಮುಖಂಡರಾದ ಮಾಳವಿಕಾ ಅವಿನಾಶ್, ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಗೀತಾ ವಿವೇಕಾನಂದ, ಮಹಿಳಾ ಮೋರ್ಚಾ ಬೆಂಗಳೂರು ಕೇಂದ್ರ ಜಿಲ್ಲೆ ಅಧ್ಯಕ್ಷೆ ರೇಖಾ ಕೆ. ಗೋವಿಂದ್ ಇದ್ದರು.