ಬೆಂಗಳೂರು: ಅಂಧ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಉಚಿತ ಲ್ಯಾಪ್ಟಾಪ್ ನೀಡುವುದನ್ನು ನಿಲ್ಲಿಸಲಾಗಿದೆ ಎಂದು ಆರೋಪಿಸಿ ರಾಷ್ಟ್ರೀಯ ಅಂಧರ ಒಕ್ಕೂಟದ ರಾಜ್ಯ ಯುವ ಸಮಿತಿ ವತಿಯಿಂದ ಇದೇ 11ರಂದು ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕರ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯುವ ಸಮಿತಿ ಸಂಯೋಜಕ ವೀರೇಶ್, ‘ಇಲಾಖೆ 2015ರಿಂದ 2017ರವರೆಗೆ ಅಂಧ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಿಸಲಾಗಿದೆ. 2018ರಿಂದ ಇಲ್ಲಿವರೆಗೆ ಲ್ಯಾಪ್ಟಾಪ್ ವಿತರಿಸಿಲ್ಲ’ ಎಂದರು.
‘ವಿವಿಧ ಕಾರಣಗಳಿಂದ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿಲ್ಲ ಎಂದು ಅಧಿಕಾರಿಗಳು ಸಬೂಬು ಹೇಳುತ್ತಿದ್ದಾರೆ. ವಿಳಂಬ ಧೋರಣೆಯಿಂದ ಅಂಧರ ಶೈಕ್ಷಣಿಕ ಚಟುವಟಿಕೆಗೆ ಹಿನ್ನಡೆಯಾಗಿದೆ’ ಎಂದರು.