ಬೆಂಗಳೂರು: ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ(ಬಿಎಂಸಿಆರ್ಐ) ಆವರಣದಲ್ಲಿ ಜುಲೈ 5ರಂದು ಉದ್ಘಾಟನೆಗೊಂಡ ಶಸ್ತ್ರಚಿಕಿತ್ಸಾ ಗ್ಯಾಸ್ಟ್ರೋಎಂಟರಾಲಜಿ ಮತ್ತು ಯಕೃತ್ತು ಕಸಿ ವಿಭಾಗವನ್ನು ಇನ್ನೂ ಕಾರ್ಯಗತಗೊಳಿಸದ ರಾಜ್ಯ ಸರ್ಕಾರ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ವಿರುದ್ಧ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ವಕೀಲ ಎಂ.ಎನ್.ಉಮೇಶ್ ಅವರು ದಾಖಲಿಸಿರುವ ನಾಗರಿಕ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಋತುರಾಜ ಅವಸ್ತಿ ಮತ್ತು ನ್ಯಾಯಮುರ್ತಿ ಸಚಿನ್ ಶಂಕರ್ ಮಗದುಮ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಸಂಸ್ಥೆಯ ನಿರ್ದೇಶಕ ಡಾ.ನಾಗೇಶ್ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಎಂ.ಜ್ಯೋತಿ ಪ್ರಕಾಶ್ ಅವರು ನ್ಯಾಯಾಲಯಕ್ಕೆ ಬುಧವಾರ ಹಾಜರಾಗಿದ್ದರು. ‘ನಿಯಮಾನುಸಾರ ಸ್ಯಾನಿಟೈಸ್ ಮಾಡದ ಹೊರತು ಕಾರ್ಯಾರಂಭ ಮಾಡಲು ಸಾಧ್ಯವಿಲ್ಲ. ಇನ್ನೂ ಎರಡು ತಿಂಗಳ ಕಾಲ ಶುಚಿಗೊಳಿಸಬೇಕು’ ಎಂದು ನಿರ್ದೇಶಕರು ತಿಳಿಸಿದರು.
‘ರಾಜ್ಯ ಸರ್ಕಾರದ ಇಂತಹ ವಿಳಂಬವು ಬಡವರ ಜೀವಕ್ಕೆ ಅಪಾಯ ಉಂಟು ಮಾಡುತ್ತದೆಯೇ ಹೊರತು ಬೇರೇನೂ ಅಲ್ಲ’ ಎಂದು ನ್ಯಾಯಾಲಯವು ಮೌಖಿಕವಾಗಿ ಅಭಿಪ್ರಾಯಪಟ್ಟಿತು.
‘ಸ್ವಚ್ಛಗೊಳಿಸುವ ಕೆಲಸವನ್ನು ಈವರೆಗೆ ಕೈಗೊಂಡಿಲ್ಲ. ಅದಕ್ಕೂ ನ್ಯಾಯಾಲಯದಿಂದ ಕಾಲಾವಕಾಶ ನೀಡುವ ತನಕ ಕಾಯುವುದೇಕೆ? ಇದನ್ನು ಗಮನಿಸಿದರೆ ಉದ್ದೇಶ ಪೂರ್ವಕವಾಗಿ ವಿಳಂಬ ಮಾಡಲಾಗುತ್ತಿದೆ. ಅಧಿಕಾರಿಗಳ ಕಾರ್ಯ ವೈಖರಿ ತೀರ ಹೀನಾಯವಾಗಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿತು.
ಮುಂದಿನ ವಿಚಾರಣೆಗೆ ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಜರಾಗಬೇಕು ಎಂದು ಸೂಚಿಸಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.