ಬೆಂಗಳೂರು: ಜಾಲಹಳ್ಳಿಯಲ್ಲಿರುವ ಎಚ್ಎಂಟಿ ಮೈದಾನ ಬಳಿಯ ಕದಂಬ ಗಾರ್ಡೇನಿಯಾ ಹೋಟೆಲ್ನಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಪತ್ರ ಬಂದಿದ್ದು, ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ತಪಾಸಣೆ ನಡೆಸುತ್ತಿದ್ದಾರೆ.
‘ಹೋಟೆಲ್ನಲ್ಲಿ ಬಾಂಬ್ ಇಟ್ಟಿರುವುದಾಗಿ ಹೇಳಿ ವ್ಯಕ್ತಿಯೊಬ್ಬ ಪೊಲೀಸ್ ಠಾಣೆಗೆ ಪತ್ರ ಕಳುಹಿಸಿದ್ದಾನೆ. ಪೊಲೀಸರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಪತ್ರ ಬರೆದಿರುವ ವ್ಯಕ್ತಿ, ‘ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಮಾಡಿದ್ದು ನಾನೇ. ಈಗ ಕದಂಬ ಗಾರ್ಡೇನಿಯಾ ಹೋಟೆಲ್ನಲ್ಲಿಯೂ ಬಾಂಬ್ ಇಟ್ಟಿರುವುದು ಕೂಡ ನಾನೇ’ ಎಂದು ಬೆದರಿಸಿದ್ದಾನೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.
‘ಅಂಚೆ ಸಿಬ್ಬಂದಿ ತಂದುಕೊಟ್ಟ ಪತ್ರ ಗಮನಿಸಿದ ಠಾಣೆ ಸಿಬ್ಬಂದಿ, ಹಿರಿಯ ಅಧಿಕಾರಿಗೆ ಮಾಹಿತಿ ನೀಡಿದ್ದರು. ನಂತರ, ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಸಮೇತ ಹೋಟೆಲ್ನಲ್ಲಿ ತಪಾಸಣೆ ನಡೆಸಲಾಗುತ್ತಿದೆ’ ಎಂದು ತಿಳಿಸಿವೆ.