ಬೆಂಗಳೂರು: ‘ಇ-ಮೇಲ್ ಮೂಲಕ ಶಾಲೆಗಳು ಹಾಗೂ ಮ್ಯೂಸಿಯಂಗಳಿಗೆ ಬಾಂಬ್ ಬೆದರಿಕೆ ಕರೆಗಳು ಬರುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ತಾಂತ್ರಿಕ ತನಿಖೆ ನಡೆಯುತ್ತಿದೆ’ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಹೇಳಿದರು.
‘ರಾಜ್ಯದಲ್ಲಿ ಮತೀಯ ಗೂಂಡಾಗಿರಿಗೆ ಅವಕಾಶ ಇಲ್ಲ. ಒಂದು ವೇಳೆ ಆ ರೀತಿಯ ಘಟನೆಗಳು ನಡೆದರೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ನಗರದಲ್ಲಿ ಗುರುವಾರ ಸುದ್ದಿಗಾರರಿಗೆ ತಿಳಿಸಿದರು.
‘ಹಾವೇರಿ ಜಿಲ್ಲೆಯ ಹಾನಗಲ್ನಲ್ಲಿ ನಡೆದ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಮತೀಯ ಗೂಂಡಾಗಿರಿಯಂತಹ ಘಟನೆಗಳಿಗೆ ಅವಕಾಶ ನೀಡದಂತೆ ಎಲ್ಲ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ’ ಎಂದು ಹೇಳಿದರು.