ಬೆಂಗಳೂರು: ‘ರಾಜೀವ್ ಗಾಂಧಿ ಭೀಕರ ಹತ್ಯೆ’ ತನಿಖೆಯ ಸೂಕ್ಷ್ಮ ಮಜಲುಗಳು ಕುರಿತ ಕೃತಿಯನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗುರುವಾರ ಬಿಡುಗಡೆ ಮಾಡಿದರು.
ನಿವೃತ್ತ ಹಿರಿಯ ಪೊಲೀಸ್ ಅಧಿಕಾರಿ ಡಿ.ಆರ್.ಕಾರ್ತಿಕೇಯನ್ ರಚಿಸಿರುವ ಕೃತಿಯನ್ನು ಡಾ.ಡಿ.ವಿ.ಗುರುಪ್ರಸಾದ್ ಕನ್ನಡಕ್ಕೆ ಅನುವಾದ ಮಾಡಿದ್ದಾರೆ.
ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಕುಮಾರಸ್ವಾಮಿ, ರಾಜೀವ್ಗಾಂಧಿ ಹತ್ಯೆ ಪ್ರಕರಣವನ್ನು ತನಿಖೆ ಮಾಡಿ, ಅದರ ಅತ್ಯಂತ ಸೂಕ್ಷ್ಮ ಮಾಹಿತಿಗಳನ್ನು ಪುಸ್ತಕ ರೂಪದಲ್ಲಿ ಹೊರತಂದಿರುವುದಕ್ಕಾಗಿ ಕಾರ್ತಿಕೇಯನ್ ಮತ್ತು ಗುರುಪ್ರಸಾದ್ ಅವರನ್ನು ಅಭಿನಂದಿಸಿದರು.
ರಾಜ್ಯದ ಪೊಲೀಸ್ ಅಧಿಕಾರಿಗಳು ಅತ್ಯಂತ ಯಶಸ್ವಿಯಾಗಿ ಈ ಪ್ರಕರಣದ ತನಿಖೆ ನಡೆಸಿ, ತಾರ್ಕಿಕ ಅಂತ್ಯ ಮುಟ್ಟಿಸಿದರು. ರಾಜ್ಯದಲ್ಲಿ ಉತ್ತಮ ಆಡಳಿತ ನೀಡಲು ಉತ್ತಮ ಅಧಿಕಾರಿಗಳು ಕಾರಣ. ಇಂತಹ ಪ್ರಾಮಾಣಿಕ ಅಧಿಕಾರಿಗಳನ್ನು ಮೈತ್ರಿ ಸರ್ಕಾರ ಗುರುತಿಸಿ ಉತ್ತೇಜನ ನೀಡುತ್ತದೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿಗೃಹ ಸಚಿವ ಎಂ.ಬಿ.ಪಾಟೀಲ, ಕೇಂದ್ರದ ಮಾಜಿ ಸಚಿವ ಎಂ.ವಿ.ರಾಜಶೇಖರನ್, ಡಿ.ಆರ್.ಕಾರ್ತಿಕೇಯನ್, ಡಿ.ವಿ.ಗುರುಪ್ರಸಾದ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಮತ್ತಿತರರು ಉಪಸ್ಥಿತರಿದ್ದರು.