ರಾಯಚೂರು: ವಿಜ್ಞಾನ ಹಾಗೂ ತಂತ್ರಜ್ಞಾನ ಅವಶ್ಯಕತೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಬಳಕೆಯಾಗುತ್ತಿದ್ದು, ಪರಿಸರಕ್ಕೆ ದೊಡ್ಡ ಪ್ರಮಾಣದಲ್ಲಿ ಹಾನಿಮಾಡಿದೆ ಎಂದು ಕೃಷಿ ವಿಶ್ವವಿದ್ಯಾಲಯ ಕುಲಪತಿ ಪಿ.ಎಂ.ಸಾಲಿಮಠ ಹೇಳಿದರು.
ಕೃಷಿ ವಿಶ್ವವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಗ್ರೀನ್ ರಾಯಚೂರು ವತಿಯಿಂದ ಶುಕ್ರವಾರ ಆಯೋಜಿಸಿದ್ದ ಪರಿಸರ ಮಿತ್ರ ಶಾಲಾ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ನೀರು ಹಾಗೂ ಆಹಾರ ಸೇರಿದಂತೆ ಎಲ್ಲವೂ ಮಲೀನಗೊಂಡಿದ್ದು, ಉತ್ತಮ ಪರಿಸರದ ಬಗ್ಗೆ ಕಾಳಜಿ ವಹಿಸದಿದ್ದರೆ ಮುಂದಿನ ಜೀವನ ಕಷ್ಟದಾಯಕವಾಗಲಿದೆ ಎಂದು ತಿಳಿಸಿದರು.
ಭೂಮಿಯ ಫಲವತ್ತತೆ ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಗೊಬ್ಬರ ಬಳಕೆ ಮಾಡುವುದರಿಂದ ಭೂಮಿಯ ಫಲವತ್ತತೆ ಹಾಳಾಗಿ, ಆಹಾರವೂ ಮಲೀನಗೊಳ್ಳುತ್ತಿದೆ. ಪರಿಸರ ಸ್ನೇಹಿಯಾಗಿ ಪರಿವರ್ತನೆಯಾಗದಿದ್ದರೆ ತೊಂದರೆ ಎದುರಿಸುವುದು ಅನಿವಾರ್ಯವಾಗಲಿದೆ ಎಂದರು.
ಜಿಲ್ಲಾ ಪರಿಸರ ನಿಯಂತ್ರಣ ಅಧಿಕಾರಿ ಎಂ.ಎಸ್.ನಟೇಶ್ ಮಾತನಾಡಿ, ಶಾಲಾ ವಿದ್ಯಾರ್ಥಿಗಳಿಗೆ ಪರಿಸರದ ಜಾಗೃತಿ ಮೂಡಿಸುವ ಸಲುವಾಗಿ ಈ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಹೇಳಿದರು. ಶಾಲಾ ವಿದ್ಯಾರ್ಥಿಗಳನ್ನು ಪರಿಸರದ ಯೋಧರಾಗಿ ಮಾಡಿ ಶಾಲೆಯಲ್ಲಿ ಉತ್ತಮ ಪರಿಸರ ನಿರ್ಮಿಸಲು ಪ್ರಯತ್ನಿಸಲಾಗಿದೆ ಎಂದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ.ಕೆ.ನಂದನೂರು, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬಳ್ಳಾರಿಯ ಹಿರಿಯ ಪರಿಸರ ಅಧಿಕಾರಿ ಕೆ.ಎಂ.ನಾಗರಾಜ್, ಮುಖ್ಯ ಶಿಕ್ಷಕ ಬಸಪ್ಪ ಗದ್ದಿ, ಗ್ರೀನ್ ರಾಯಚೂರು ಸಂಸ್ಥೆಯ ಕೊಂಡ ಕೃಷ್ಣಮೂರ್ತಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ವೀರಭದ್ರಪ್ಪ, ಸಹಾಯಕ ಪರಿಸರ ಮಾಲಿನ್ಯ ನಿಯಂತ್ರಣಾಧಿಕಾರಿ ಪವನ್ ಕುಮಾರ್, ಬಿಜಿವಿಎಸ್ ಸೈಯದ್ ಹಫೀಜುಲ್ಲಾ ಇದ್ದರು.
* *
ವಿದ್ಯಾರ್ಥಿ ದೆಸೆಯಲ್ಲಿ ಪರಿಸರ ಕಾಳಜಿ ಬೆಳೆಸಿಕೊಳ್ಳುವುದು ತುಂಬಾ ಮುಖ್ಯ. ಪರಿಸರ ಉಳಿಸಿಕೊಂಡರೆ ಮಾತ್ರ ಮನುಷ್ಯರು ಸೇರಿದಂತೆ ಎಲ್ಲ ಜೀವಿಗಳು ಸುಗಮದಿಂದ ಉಸಿರಾಡಿ ಜೀವ ಪೋಷಣೆ ಮಾಡಿಕೊಳ್ಳಲು ಸಾಧ್ಯ.
ಎಂ.ಎಸ್. ನಟೇಶ, ಜಿಲ್ಲಾ ಪರಿಸರ ನಿಯಂತ್ರಣ ಅಧಿಕಾರಿ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.